ಹೊಸ ದಿಗಂತ ವರದಿ, ಸೋಮವಾರಪೇಟೆ:
ಸೋಮವಾರಪೇಟೆ ಬಿ.ಟಿ.ಸಿ.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರುಗಳನ್ನು ನೇಮಕ ಮಾಡಲಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವ ಸಲುವಾಗಿ ಕಾಲೇಜಿನಲ್ಲಿ ದೊರಕುವ ಸೌಲಭ್ಯಗಳನ್ನು ಪರಿಚಯಿಸುವ ಕರಪತ್ರವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಪ್ರಸ್ತುತ ವಾಣಿಜ್ಯ ವಿಭಾಗಕ್ಕೆ ವಿವಿಧ ಭಾಗಗಳಿಂದ ಮೂರು ಮಂದಿ ಖಾಯಂ ಸಹ ಪ್ರಾಧ್ಯಾಪಕರನ್ನು ನೇಮಿಸಲಾಗಿದೆ, ಕೌನ್ಸಿಲಿಂಗ್ ಮೂಲಕ ಏಳು ಮಂದಿ ಉಪನ್ಯಾಸಕರನ್ನು, ಕ್ರೀಡೆಗೆ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಒಬ್ಬರು ದೈಹಿಕ ನಿರ್ದೇಶಕರನ್ನು ನೇಮಿಸಲಾಗಿದೆ. ಆ ಮೂಲಕ ಕಾಲೇಜಿನಲ್ಲಿ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಇಲ್ಲಿನ ವಿದ್ಯಾರ್ಥಿಗಳು ಬೇರೆಡೆಗೆ ತೆರಳದೆ ಇಲ್ಲಿಯೇ ಶಿಕ್ಷಣ ಪಡೆಯಿರಿ ಎಂದರು.
ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳಿಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳಿಗೆ ಈ ಕಾಲೇಜಿನ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಸ್.ಮಹೇಶ್, ಸದಸ್ಯರಾದ ಶರತ್ ತಂಗಮ್ಮ, ಪ್ರಾಂಶುಪಾಲೆ ಧನಲಕ್ಷ್ಮಿ, ಉಪನ್ಯಾಸಕಿ ಫೌಸಿಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೋಮೇಶ್, ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷೆ ಸುಮಾ ಸುದೀಪ್ ಮುಂತಾದವರು ಉಪಸ್ಥಿತರಿದ್ದರು.