ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ಸಮಗ್ರ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವ ಸಮತೋಲನದ ಬಜೆಟ್ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತದ ಸ್ಪಷ್ಟ ಪ್ರತಿಬಿಂಬ ಈ ಬಜೆಟ್ನಲ್ಲಿ ಕಾಣಿಸುತ್ತದೆ ಎಂದು ಹೇಳಿದ್ದಾರೆ. ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಿರುವುದು ರಾಜ್ಯದ ಆರ್ಥಿಕ ಬೆಳವಣಿಗೆಗೆ ಬಲ ನೀಡುವ ನಿರ್ಣಯವಾಗಿದೆ. ಜೊತೆಗೆ ಬಂಡವಾಳ ವೆಚ್ಚಕ್ಕೂ ಹೆಚ್ಚಿನ ಒತ್ತು ನೀಡಿರುವುದರಿಂದ ಮೂಲಸೌಕರ್ಯ ಅಭಿವೃದ್ಧಿ ವೇಗ ಪಡೆದುಕೊಳ್ಳಲಿದೆ ಮತ್ತು ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.
ರೈತ ಕಲ್ಯಾಣ, ಕೈಗಾರಿಕಾ ಅಭಿವೃದ್ಧಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಬಜೆಟ್ನಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ಹಾಗೆಯೇ ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿರುವುದು ರಾಜ್ಯದ ಸುಸ್ಥಿರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನಕ್ಕಾಗಿ ಪ್ರತಿ ಎಕರೆ ಕೃಷಿ ಜಮೀನಿಗೆ 30 ಲಕ್ಷ ರೂ. ಮತ್ತು ತರಿ ಜಮೀನಿಗೆ 40 ಲಕ್ಷ ರೂ. ಪರಿಹಾರ ನಿಗದಿ ಮಾಡಿರುವುದು ರೈತರಿಗೆ ಸಹಾಯಕವಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೂ ಮುಂದಾಗಿರುವುದು ಸ್ವಾಗತಾರ್ಹ ಕ್ರಮ ಎಂದು ಹೇಳಿದ್ದಾರೆ.
ಇದಕ್ಕೆ ಜೊತೆಗೆ ಜಿಟಿಟಿಸಿ ಕೇಂದ್ರಗಳು ಹಾಗೂ ಕೌಶಲ್ಯ ತರಬೇತಿ ಅಕಾಡೆಮಿಗಳ ಸ್ಥಾಪನೆ ಕೈಗಾರಿಕಾ ವೃದ್ಧಿಗೆ ಪೂರಕವಾಗಲಿದೆ. ಇದರ ಮೂಲಕ ಗುಣಮಟ್ಟದ ಮಾನವ ಸಂಪನ್ಮೂಲ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.



