ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಎದುರಿಸಲಿರುವ ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನಂತಹ ರಾಜ್ಯಗಳಿಗೆ 2026-27ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಯಾವುದೇ ವಿಶೇಷ ಆದ್ಯತೆ ನೀಡಿಲ್ಲ ಎಂಬ ವಿರೋಧ ಪಕ್ಷಗಳ ಟೀಕೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾರ್ಮಿಕವಾಗಿ ಉತ್ತರಿಸಿದ್ದಾರೆ.
ಈ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಸರ್ಕಾರವು ಏನೇ ಮಾಡಿದರೂ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಒಂದು ವೇಳೆ ಈ ರಾಜ್ಯಗಳಿಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದರೆ, ‘ಚುನಾವಣೆ ಇರುವುದರಿಂದಲೇ ಇಂತಹ ಘೋಷಣೆ ಮಾಡಲಾಗಿದೆ’ ಎಂದು ಟೀಕಿಸುತ್ತಿದ್ದರು. ಈಗ ಘೋಷಣೆ ಮಾಡದಿದ್ದಾಗ ‘ನಿರ್ಲಕ್ಷಿಸಲಾಗಿದೆ’ ಎಂದು ದೂರುತ್ತಿದ್ದಾರೆ,” ಎಂದು ಹೇಳಿದರು.
ಕೇಂದ್ರ ಸರ್ಕಾರವು ದೇಶದ ಒಟ್ಟಾರೆ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸುತ್ತದೆಯೇ ಹೊರತು, ಕೇವಲ ರಾಜಕೀಯ ಲಾಭಕ್ಕಾಗಿ ಅಥವಾ ಚುನಾವಣೆಗಳ ಮೇಲೆ ಕಣ್ಣಿಟ್ಟು ಯೋಜನೆಗಳನ್ನು ರೂಪಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.



