ಹೊಸದಿಗಂತ ವರದಿ,ಯಾದಗಿರಿ:
ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಹೆದ್ದಾರಿಯಿಂದ ಪಕ್ಕಕ್ಕೆ ಇಳಿದು ಅಪಘಾತವಾಗಿ ಹಲವು ಗಾಯಗೊಂಡಿರುವ ಘಟನೆ ,ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಗ್ರಾಮದ ಬಳಿ ನಡೆದಿದೆ.
30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು
ದಾವಣಗೆರೆಯಿಂದ ಕಲಬುರ್ಗಿ ಕಡೆಗೆ ಹೊರಟಿದ್ದ ಕಲ್ಬುರ್ಗಿಯ ಬಸ್ ಘಟಕ ಸಂಖ್ಯೆ ಮೂರರ ಬಸ್ ಚಾಲಕ ವೇಗವಾಗಿ ಚಲಾಯಿಸುತ್ತಿರುವಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ಬಸ್ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸುರಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮತ್ತೆ ಬಸ್ ಅಪಘಾತ
ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಖಾಸಗಿ ಸ್ಲೀಪರ್ ಕೋಚ್ ಬಸ್ ಮತ್ತು ಕಾರಿನ ಮಧ್ಯ ನಡೆದ ಅಪಘಾತದಲ್ಲಿ ಒಂಬತ್ತು ಜನ ಸಜೀವ ದಹನವಾಗಿರುವ ಘಟನೆ ನಡೆದು ಕೆಲವೇ ದಿನಗಳು ಕಳೆಯುವ ಅಷ್ಟರಲ್ಲಿ ಮತ್ತೆ ಬಸ್ ಅಪಘಾತವಾಗಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ರಸ್ತೆ ಇಕ್ಕಟ್ಟಾಗಿದ್ದರಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು ಕೂಡಲೇ ರಸ್ತೆ ಕಾಮಗಾರಿಯನ್ನು ಆರಂಭಿಸಿ ಆಗಲಿ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.



