ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಏಳು ದಿನಗಳಲ್ಲಿ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ( Citizenship Amendment Act-CAA) ಜಾರಿಗೆ ತರುತ್ತೇವೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಘೋಷಣೆ ಮಾಡಿದ್ದಾರೆ.
ಪಶ್ಚಿಮ ಬಂಗಾಳ ಮಾತ್ರವಲ್ಲ ಇಡೀ ದೇಶದಲ್ಲಿ ಸಿಎಎ ಜಾರಿಗೆ ಬರಲಿದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ಸಭೆಯನ್ನುದೇಶಿಸಿ ಮಾತನಾಡಿದ್ದು, ಕಳೆದ ತಿಂಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದ ಕಾನೂನು ಎಂದು ಬಣ್ಣಿಸಿದ್ದರು. ಸಿಎಎ ಕಾನೂನನ್ನು ಈಗಾಗಲೇ ಅನುಮೋದಿಸಲಾಗಿದೆ. ಆದರೆ ಅದನ್ನು ಜಾರಿಗೊಳಿಸುವ ನಿಯಮಗಳ ಬಗ್ಗೆ ತಿಳಿಸಲಾಗಿಲ್ಲ. ಇನ್ನು ಒಂದು ವಾರದಲ್ಲಿ ಕಾಯ್ದೆ ಜಾರಿಯಾಗಲಿದೆ ಎಂದಿದ್ದಾರೆ.
ಈ ಮಸೂದೆಯು ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಇಲ್ಲಿನ ಪೌರತ್ವ ನೀಡುವುದನ್ನು ಪ್ರತಿಪಾದಿಸುತ್ತದೆ. ಮುಸ್ಲಿಮರನ್ನು ಈ ಕಾಯ್ದೆಯಿಂದ ದೂರ ಇಡಲಾಗಿದೆ. 2014 ಡಿಸೆಂಬರ್ 31ರ ಮೊದಲು ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡಲು ಅವಕಾಶ ಮಾಡಿಕೊಡುತ್ತದೆ.
ತಮ್ಮ ಧರ್ಮದ ಕಾರಣಕ್ಕೆ ಕಿರುಕುಳ ಅನುಭವಿಸಿ 31.12.2014ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ವಿದೇಶಿಯರಿಗೆ ಮಾತ್ರ ಸಿಎಎ ಅನ್ವಯವಾಗುತ್ತದೆ. ಈ ಮೂರು ದೇಶಗಳು ಸೇರಿದಂತೆ ಯಾವುದೇ ದೇಶದಿಂದ ಭಾರತಕ್ಕೆ ವಲಸೆ ಬರುವ ಮುಸ್ಲಿಮರು ಸೇರಿದಂತೆ ಬೇರೆ ಯಾವುದೇ ವಿದೇಶಿಯರಿಗೆ ಇದು ಅನ್ವಯಿಸುವುದಿಲ್ಲ.
ಇನ್ನು ಸಿಎಎ ಯಾವುದೇ ಭಾರತೀಯ ಪ್ರಜೆಗೆ ಅನ್ವಯಿಸುವುದಿಲ್ಲ. ಎಲ್ಲಾ ಭಾರತೀಯ ನಾಗರಿಕರು ಭಾರತದ ಸಂವಿಧಾನದಿಂದ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನು ಅನುಭವಿಸಲು ಅರ್ಹರಾಗಿರುತ್ತಾರೆ.