ಹೊಸದಿಗಂತ ವರದಿ ಶಿವಮೊಗ್ಗ:
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆಯೊಂದಿಗೆ ಶಿಕ್ಷಣ ಕೊಡುವ ಉದ್ದೇಶದಿಂದ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಬಳಿ ಕ್ಯಾನ್ಸರ್ ರೆಸಿಡೆನ್ಶಿಯಲ್ ಸ್ಕೂಲ್ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಿಂಗಳಲ್ಲಿ ಶಾಲೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಇದಕ್ಕಾಗಿ ಎನ್ ಜಿ ಓ ನೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ. ಅವರು ಕೂಡ ವರದಿ ನೀಡಿದ್ದಾರೆ. ರಾಜ್ಯದಲ್ಲಿ ಈ ರೀತಿಯ 3500ಕ್ಕೂ ಹೆಚ್ಚು ಮಕ್ಕಳನ್ನು ಗುರುತಿಸಲಾಗಿದೆ ಎಂದರು.
ಎಸ್ಎಸ್ಎಲ್ ಸಿ ವರೆಗಿನ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಈ ಶಾಲೆಯಲ್ಲಿ ಅವಕಾಶವಿರಲಿದೆ. ಪೋಷಕರು ಕೂಡ ಅಲ್ಲಿಯೇ ಇದ್ದು ನೋಡಿಕೊಳ್ಳುವಂತಹ ವ್ಯವಸ್ಥೆ ಮಾಡಲಾಗುತ್ತದೆ. ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಬೇರೆ ಕಡೆ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಕ್ವಾಲಿಟಿ, ಇಕ್ವಾಲಿಟಿ ಹಾಗೂ ಆಕ್ಸೆಸಿಬಿಲಿಟಿಯಲ್ಲಿ ಈ ಶಾಲೆ ನಡೆಲಾಗುತ್ತದೆ. ಇದರಿಂದ ಬಡವರ ಮಕ್ಕಳಿಗೆ ನೆರವಾಗಲಿದೆ. ಆರ್ಥಿಕವಾಗಿಯೂ ಹೊರೆ ತಗ್ಗಿ ಶಿಕ್ಷಣವೂ ಸಿಗಲಿದೆ ಎಂದರು.