ಹೊಸದಿಗಂತ ವರದಿ ಕುಶಾಲನಗರ:
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಮದಲಾಪುರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕೂಡಿಗೆಕೊಪ್ಪಲು ಗ್ರಾಮದ ಚಂದನ್ ಎಂಬವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರಪೇಟೆ- ಹುದುಗೂರು ಕಡೆಯಿಂದ ಕೂಡಿಗೆ ಕಡೆಗೆ ಬರುತ್ತಿದ್ದ ಚಂದನ್ ಚಾಲಿಸುತ್ತಿದ್ದ
(ಕೆ.ಎ. 03. ಎಂ. ಜೆ 6105)ಕಾರು, ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರ ಗ್ರಾಮದ ರಸ್ತೆಯ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಮನೆಯ ಮುಂಭಾಗ ನಿಲ್ಲಿಸಿದ್ದ ಬೈಕ್’ಗೆ ಹಾಗೂ ಅದರ ಜೊತೆಗೆ ನಿಂತಿದ್ದ ಮಾಲಕನಿಗೆ ಡಿಕ್ಕಿ ಹೊಡೆದಿದೆ. ನಂತರ ಸಮೀಪದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಈ ಸಂದರ್ಭ ವಿದ್ಯುತ್ ಕಂಬ ತುಂಡಾಗಿ ಕಾರಿನ ಚಾಲಕನ ಎದೆಯ ಭಾಗಕ್ಕೆ ತೀವ್ರವಾದ ಪೆಟ್ಟಾಗಿದ್ದು, ಕುಶಾಲನಗರ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.
ಬೈಕ್ ಮಾಲಕ ಪ್ರಜ್ವಲ್ ಎಂಬವರ ಕಾಲಿನ ಭಾಗಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಅವರಿಗೆ ಕುಶಾಲನಗರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.