ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್ನೋಟ್ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಸಾವಿಗೆ ಸಂಸದ ಡಾ ಕೆ ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್ ನೋಟ್ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಇನ್ನೂ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆ ಆಗಲಿದೆ ಎಂದು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬೆಳಿಗ್ಗೆ ಮಾಹಿತಿ ಬಂದಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.