ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ನಡೆದಿದೆ.
ಗುರುಕಿರಣ್, ಮೋಹನ್ ಹಾಗೂ ಜ್ಞಾನೇಶ್ ಮೃತಪಟ್ಟಿದ್ದು, ಪ್ರೇಮ್ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾಗಿದ್ದಾರೆ.
ಸ್ನೇಹಿತರೆಲ್ಲರೂ ತುಮಕೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದರು. ಈ ವೇಳೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂಬದಿಯಿಂದ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪಿದ್ದಾರೆ.
ಸ್ಥಳೀಯರು ತಕ್ಷಣವೇ ಆಗಮಿಸಿ, ಒಳಗೆ ಸಿಲುಕಿದ್ದವರನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



