ಹೊಸದಿಗಂತ ವರದಿ ಮಡಿಕೇರಿ:
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಾದ ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ, ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್, ಮತ್ತಿತರರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳೆಲ್ಲರೂ ಠಾಣೆಗೆ ಹಾಜರಾಗಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಮೊಕದ್ದಮೆ:
ಮತ್ತೊಂದೆಡೆ ಕರ್ತವ್ಯ ನಿಮಿತ್ತ ತೆರಳುತ್ತಿದ್ದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ದೈಹಿಕವಾಗಿಯೂ ತೊಂದರೆ ನೀಡಿದ್ದಾಗಿ ಮಡಿಕೇರಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ ಅವರು ನಗರ ಠಾಣೆಗೆ ದೂರು ನೀಡಿದ್ದಾರೆ.
ಆಗಸ್ಟ್ 18ರಂದು ತಾನು ಚಿಕ್ಕಪೇಟೆ ಬಳಿಯಿರುವ ಸಾರ್ವಜನಿಕ ಶೌಚಾಲಯ ಶುಚಿತ್ವ ಬಗ್ಗೆ ಪರಿಶೀಲಿಸುವ ಸಂಬಂಧ ನಗರಸಭಾ ಸದಸ್ಯರುಗಳೊಂದಿಗೆ ತೆರಳುತ್ತಿದ್ದಾಗ ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು, ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಗಲಾಟೆ ಮಾಡಿದ್ದಾರೆ. ದೈಹಿಕವಾಗಿಯೂ ತೊಂದರೆ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ವಿವರಿಸಿದ್ದು, ಈ ಸಂಬಂಧ 13ಮಂದಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಮೊಕದ್ದಮೆ ದಾಖಲಾಗಿದೆ.