ಮುಡಾ ಗಮನ ಬೇರೆಡೆಗೆ ಸೆಳೆಯಲು ಜಾತಿಗಣತಿ: ಕುಮಾರಸ್ವಾಮಿ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುಮಾರು ಹತ್ತು ವರ್ಷಗಳ ಹಿಂದೆ ತಯಾರಿಸಲಾದ ಜಾತಿ ಗಣತಿ ವರದಿಯ ಪ್ರಸ್ತುತತೆಯ ಬಗ್ಗೆ ಪ್ರಶ್ನಿಸಿದ ಕುಮಾರಸ್ವಾಮಿ, ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಮುಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದರು.

ಹಿಂದುಳಿದ ವರ್ಗಗಳ ಸಮುದಾಯಗಳ ಸಚಿವರು ಮತ್ತು ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚರ್ಚಿಸಿದ್ದು, ಜಾತಿ ಗಣತಿ ವರದಿ ಎಂದು ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂತರಾಜು ಸಮಿತಿಯನ್ನು ಯಾವಾಗ ರಚಿಸಲಾಯಿತು? 10 ವರ್ಷಗಳ ಹಿಂದೆ ಕಾಂತರಾಜು ಆಯೋಗ ರಚನೆ ಮಾಡಿದ್ದರು. ಈಗ ಆ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಲಿಲ್ಲ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ದಶಕದ ಹಿಂದೆ ನಡೆದ ಜಾತಿ ಗಣತಿಯಿಂದ ಯಾವುದೇ ಸಮುದಾಯಕ್ಕೆ ಯಾವುದೇ ಪ್ರಯೋಜನ ಇಲ್ಲ. ನಾನು ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು (ಕಾಂಗ್ರೆಸ್‌ನಿಂದ) ಆರೋಪಿಸಲಾಗಿದೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ ಯಾಕೆ? ಎಂದು ಪ್ರಶ್ನಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!