ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸರಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷಗಳು ಧರಣಿ ನಡೆಸುತ್ತಿವೆ. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ʻತಮಿಳುನಾಡು ಏಜೆಂಟರಂತೆ ವರ್ತಿಸಬಾರದು ಎಂಬುದು ನಮ್ಮ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ತಿಳಿದಿರಬೇಕು. ವಾಸ್ತವಿಕ ಸತ್ಯವನ್ನು ಮೊದಲು ಅವರು ಅರಿತುಕೊಳ್ಳಬೇಕು. ನಮ್ಮ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ಕುಡಿಯಲು ಕೂಡ ನೀರು ಸಾಕಾಗುತ್ತಿಲ್ಲ ಎಂಬುದು ಗೊತ್ತಿದ್ದರೂ ನೀರು ಹರಿಸುವುದು ಸರಿಯೇʼ? ಎಂದು ಪ್ರಶ್ನಿಸಿದರು. ಪ್ರಕರಣ ಸುಪ್ರೀಂಕೋರ್ಟ್ನಲ್ಲಿರಬೇಕಾದರೆ ಪ್ರಧಾನಿ ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ”ಈಗಿನ ಕಾಂಗ್ರೆಸ್ ಸರಕಾರ ಕಾವೇರಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ, ರೈತರು ಅಕ್ಷರಶಃ ಬೀದಿ ಪಾಲಾಗಿದ್ದಾರೆ, ದಿನದಿಂದ ದಿನಕ್ಕೆ ನೀರು ತಮಿಳುನಾಡಿಗೆ ಹರಿಯುತ್ತಿದೆ. ರಾಜ್ಯ ಸರಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ವಿಷಯದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಏಕೆಂದರೆ ಇದು ಕಾಂಗ್ರೆಸ್ ಸರ್ಕಾರದ ವೈಫಲ್ಯ ಎಂದು ಆಕ್ರೋಶ ಹೊರಹಾಕಿದರು.