ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದ್ಯ ರಾಜ್ಯದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರಕ್ಕೆ ಪ್ರತಿಭಟನೆಗಳು ಜೋರಾಗಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ʻಕಾವೇರಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲʼ ಎಂಬ ಮಾತನ್ನು ಹೇಳಿದ್ದಾರೆ.
ಇಂದು ಪ್ರಸಿದ್ಧ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿಯ ದರುಶನ ಪಡೆದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಾವೇರಿ ನಮ್ಮದು, ನದಿ ನೀರಿನ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.
ನಿನ್ನೆ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆ ನಡೆಸಿ ಮತ್ತೆ ಮುಂದಿನ ಹದಿನೈದು ದಿನಗಳ ಕಾಲ ತಮಿಳುನಾಡಿಗೆ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದರು. ಈಗಾಗಲೇ ಈ ವಿಚಾರ ಕುರಿತಂತೆ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು, ರಾಜಿ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ಉತ್ತರಿಸಿದರು.
ನದಿ ನೀರಿನ ವಿಚಾರ ಇಟ್ಟುಕೊಂಡು ವಿಪಕ್ಷಗಳು ರಾಜಕೀಯ ಮಾಡುವುದನ್ನು ನಿಲ್ಲಿಸಲಿ. ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ಮಳೆಗಾಗಿ ಮಾದಪ್ಪನಲ್ಲಿ ಪ್ರಾರ್ಥಿಸಿದ್ದೇವೆ ಎಂದರು.