ಸಿಬಿಐ ನನ್ನ ಮೇಲೆ ಕೇಸ್ ದಾಖಲಿಸಿದೆ, ಇಡಿ ಯಾವ ಎಫ್​ಐಆರ್ ಹಾಕಿದೆ ಗೊತ್ತಿಲ್ಲ: ಡಿ. ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಅಧಿಕಾರಿಗಳು ನಿತ್ಯ ನನಗೆ ಹಾಗೂ ನನ್ನ ಸ್ನೇಹಿತರನ್ನು ವಿಚಾರಣೆಗೆ ಕರೆಯುತ್ತಿದ್ದಾರೆ. ಸಿಬಿಐನವರು ನನ್ನ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಆದರೆ ಇಡಿ ಅವರು ಏನು ಎಫ್ಐಆರ್ ದಾಖಲಿಸಿದ್ದಾರೆ ಎಂದು ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಿನ್ನೆಯೂ ಕೆಲವರನ್ನು ಕರೆದು ನನ್ನ ಬಗ್ಗೆ ವಿಚಾರಣೆ ಮಾಡಿದ್ದಾರೆ. ಸೋಮವಾರ ವಿಚಾರಣೆಗೆ ಬರುವಂತೆ ಇಡಿಯವರು ನನ್ನನ್ನು ಕರೆದಿದ್ದಾರೆ. ಭಾರತ ಐಕ್ಯತಾ ಯಾತ್ರೆಗೆ ಪೂರ್ವಸಿದ್ಧತೆ ಹಾಗೂ ಅಧಿವೇಶನ ನಡೆಯುತ್ತಿದ್ದು, ನನಗೆ ನನ್ನದೇ ಆದ ಜವಾಬ್ದಾರಿಗಳಿವೆ. ಹೀಗಾಗಿ ನಮ್ಮ ವಕೀಲರ ಜೊತೆ ಮಾತನಾಡುತ್ತೇನೆ. ಸಿಬಿಐನಲ್ಲಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದ್ದು, ಇಡಿಯವರು ಯಾವ ಪ್ರಕರಣ ದಾಖಲಿಸಿದ್ದಾರೋ ಗೊತ್ತಿಲ್ಲ. ಇಡೀ ರಾಜ್ಯದಲ್ಲಿ ಕೇವಲ ನನ್ನ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಮಾತ್ರ ಸರ್ಕಾರ ಸಿಬಿಐಗೆ ವಹಿಸಿದೆ ಎಂದು ತಿಳಿಸಿದರು.
ಅಡ್ವೊಕೇಟ್ ಜನರಲ್ ಅವರು ಈ ಪ್ರಕರಣ ಸಿಬಿಐಗೆ ಸೂಕ್ತವಲ್ಲ ಎಂದು ಹೇಳಿದ್ದರೂ ಸಿಬಿಐಗೆ ನೀಡಿದ್ದಾರೆ. ಈ ಪ್ರಕರಣದ ವಿಚಾರವಾಗಿ ನಾನು ಹೈಕೋರ್ಟ್ ಮೆಟ್ಟಿಲೇರಿದ್ದೇನೆ. ನಾನು ಅವರ ತನಿಖೆಗೆ ಎಲ್ಲ ಸಹಕಾರ ನೀಡುತ್ತೇನೆ. ನನ್ನ ಜೊತೆ ವ್ಯಾಪಾರ, ವ್ಯವಹಾರ ಮಾಡಿದವರಿಗೆ ಕಿರುಕುಳ ನೀಡಲಾಗುತ್ತಿದ್ದು, ನಮ್ಮ ಕಾರ್ಯಕರ್ತರು ವಿಚಲಿತರಾಗಿದ್ದಾರೆ ಎಂದರು .
ನಾನು ಕಾನೂನು ಬಾಹಿರವಾಗಿ ಯಾವುದೇ ಅಪರಾಧ ಮಾಡಿಲ್ಲ. ಕಾನೂನು ಇದೆ ನೋಡೋಣ ಏನಾಗುತ್ತದೆ. ಕಳೆದ ಒಂದು ವಾರದಿಂದ ನಾನು ಯಾತ್ರೆಯ ಎಲ್ಲ ಜಿಲ್ಲೆಗಳ ಪ್ರವಾಸ ಮಾಡುತ್ತಿದ್ದು, ಪಕ್ಷದ ಸಭೆ ಕಾರಣ ಬೆಂಗಳೂರಿಗೆ ಬಂದಿದ್ದೇನೆ. ನಾಳೆ ಮತ್ತೆ ಮಂಡ್ಯ ಹಾಗೂ ಮೈಸೂರು ಪ್ರವಾಸ ಮಾಡಲಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!