February 17, 2026
Tuesday, February 17, 2026
spot_img

ಸಿಎಂ ಮನೆ ಬಾಗಿಲಿಗೂ ಬಂದ ‘ಜನಗಣತಿ’: ಸಮಸಮಾಜ ನಿರ್ಮಾಣಕ್ಕೆ ಸಿದ್ದರಾಮಯ್ಯ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಮಹತ್ವದ ಜಾತಿ ಗಣತಿ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಹಿತಿ ನೀಡುವ ಮೂಲಕ ಬೆಂಬಲ ಸೂಚಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಐವರನ್ನೊಳಗೊಂಡ ಸಮೀಕ್ಷಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸುಮಾರು 45 ನಿಮಿಷಗಳ ಕಾಲ ಸಂಪೂರ್ಣ ಮಾಹಿತಿಯನ್ನು ಒದಗಿಸಿದ್ದಾರೆ. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಅವರು ಉತ್ತರಿಸಿದ್ದಾರೆ.

ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, “ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಿಬ್ಬಂದಿಗೆ ಮಾಹಿತಿ ನೀಡಿ ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದ್ದೇನೆ,” ಎಂದು ತಿಳಿಸಿದ್ದಾರೆ.

ಸಮಸಮಾಜ ನಿರ್ಮಾಣಕ್ಕೆ ಮಹತ್ವದ ಹೆಜ್ಜೆ
ಈ ಸಮೀಕ್ಷೆಯ ಮಹತ್ವವನ್ನು ಒತ್ತಿ ಹೇಳಿರುವ ಮುಖ್ಯಮಂತ್ರಿಗಳು, “ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ,” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ಕರೆ ನೀಡಿದ್ದು, ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು ಎಂದು ಕೋರಿದ್ದಾರೆ.

ವೈಯಕ್ತಿಕ ಮಾಹಿತಿ ದುರ್ಬಳಕೆಯ ಭೀತಿ ಬೇಡ: ಸಿಎಂ ಭರವಸೆ
ಸಿಎಂ ಸಿದ್ದರಾಮಯ್ಯ ಅವರ ಪ್ರಕಾರ, ಸಮೀಕ್ಷೆ ವೇಳೆ ಪ್ರತಿಯೊಬ್ಬರೂ ಮಾಹಿತಿ ನೀಡಿದಾಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿ ಬಗ್ಗೆ ನಿಖರ ಮಾಹಿತಿ ದೊರೆಯುತ್ತದೆ. ಈ ನಿಖರ ದತ್ತಾಂಶದ ಆಧಾರದ ಮೇಲೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ ಅವರ ಪ್ರಗತಿಗಾಗಿ ಸೂಕ್ತ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗುತ್ತದೆ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ಬದಲಿಗೆ ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ವೈಜ್ಞಾನಿಕ ಪ್ರಯತ್ನ ಎಂದು ಸಿಎಂ ತಿಳಿಸಿದ್ದಾರೆ. “ಸಮೀಕ್ಷೆಯಲ್ಲಿ ಭಾಗಿಯಾದರೆ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಆಗುವುದಿಲ್ಲ. ಹೀಗಾಗಿ ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿ ಜೊತೆ ಮಾಹಿತಿ ಹಂಚಿಕೊಳ್ಳಿ,” ಎಂದು ಅವರು ಜನರಿಗೆ ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !