ಕೇಂದ್ರದಿಂದ ರಾಜ್ಯಗಳ ಶಕ್ತಿ ಕುಂದಿಸುವ ಪ್ರಯತ್ನ: ಕೃಷ್ಣ ಭೈರೇಗೌಡ ಆರೋಪ

ಹೊಸದಿಗಂತ ವರದಿ, ಮಡಿಕೇರಿ:

ದಕ್ಷಿಣ ಭಾರತದ ರಾಜ್ಯಗಳಿಗೆ ಬಜೆಟ್’ನಲ್ಲಿ ಅಗತ್ಯ ಅನುದಾನ ಮೀಸಲಿಡದೆ, ರಾಜ್ಯಗಳ ಶಕ್ತಿಯನ್ನು ಕುಂದಿಸುವ ಪ್ರಯತ್ನ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಶಕ್ತಿ ವೃದ್ಧಿಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ನೆರವು ನೀಡುವ ಅಗತ್ಯವಿದೆ. ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ ಎಂದು ಅಭಿಪ್ರಾಯಪಟ್ಟರು.
ಎಂದರು.

ಆದಾಯ ಗಳಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಸೇರಬೇಕಾದ ಆರ್ಥಿಕ ಪಾಲನ್ನು ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.
2017 ರ ಬಜೆಟ್’ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿದ್ದ ಕೇಂದ್ರ ಸರ್ಕಾರ ಈ ಬಾರಿಯೂ ಅಷ್ಟೇ ಮೊತ್ತವನ್ನು ನೀಡಿದೆ. ಆದರೆ ಬಜೆಟ್’ನ ಗಾತ್ರ ಎರಡು ಪಟ್ಟು ಹೆಚ್ಚಾಗಿದೆ. ಗಾತ್ರ ಹೆಚ್ಚಾದಂತೆ ನಮ್ಮ ಪಾಲಿನ ಹಣವನ್ನೂ ಹೆಚ್ಚಿಗೆ ನೀಡಬೇಕಾಗಿತ್ತು, ಆದರೆ ಕೇಂದ್ರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಕೇಂದ್ರ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ, ಅನುದಾನದ ವಿಚಾರದಲ್ಲಿ ಕಟ್ಟುಕಥೆ ಹೇಳುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ, ಅಧಿವೇಶನದಲ್ಲಿ ಎಳೆ ಎಳೆಯಾಗಿ ವಿವರಿಸುತ್ತೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿತ್ತು, ರೈತರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಹಣ ನೀಡಿಲ್ಲ. ಮೇಕೆದಾಟು, ಮಹಾದಾಯಿ ಸೇರಿದಂತೆ ಬೃಹತ್ ನೀರಾವರಿ ಯೋಜನೆಗಳಿಗೆ ಕೇಂದ್ರ ಅಗತ್ಯ ಸಹಕಾರವನ್ನು ನೀಡುತ್ತಿಲ್ಲ, ನಮ್ಮ ನದಿ ನೀರನ್ನು ನಾವು ಬಳಸಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದು, ಕರ್ನಾಟಕದಿಂದಲೂ ಫೆ.7 ರಂದು ದೆಹಲಿ ಚಲೋ ಹೋರಾಟ ನಡೆಸಲಾಗುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!