ಹೊಸದಿಗಂತ ವರದಿ, ಸೋಮವಾರಪೇಟೆ:
ದೇಶದಲ್ಲಿ ಕೋವಿಡ್ ನಿಗ್ರಹ ಹಾಗೂ ಹತೋಟಿಗೆ ತರಲು ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಜನ ಸಾಮಾನ್ಯರು ಸರ್ಕಾರದೊಡನೆ ಕೈಜೋಡಿಸಬೇಕೆಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮನವಿ ಮಾಡಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ 15ವರ್ಷ ಮೇಲ್ಪಟ್ಟ 18ವರ್ಷದೊಳಗಿನ ವಿದ್ಯಾರ್ಥಿಗಳಿಗೆ ನೀಡುವ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಳೆದ 2-3 ವರ್ಷಗಳಿಂದ ಕೊರೋನಾ ಅಟ್ಟಹಾಸದಿಂದಾಗಿ ದೇಶದ ಪರಿಸ್ಥಿತಿ ಹದಗೆಟ್ಟಿದೆ ಜನಜೀವನ,ಆರ್ಥಿಕ ಪರಿಸ್ಥಿತಿ ತತ್ತರಿಸಿದೆ ಎಂದರು.
ವಿಶ್ವದಾದ್ಯಂತ ಕೊರೋನಾ ಆತಂಕ ಮೂಡಿಸಿದೆ. 130ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಕಷ್ಟ ಸಾಧ್ಯವಾದರೂ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಂಡಿದೆ. ನಮ್ಮಲ್ಲಿ ಉಚಿತವಾಗಿ ಕೋವಿಡ್ ಪರಿಕ್ಷೆ ಮಾಡಲಾಗುತ್ತಿದೆ ಆದರೆ ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕಾದಲ್ಲಿ ಒಮ್ಮೆ ಪರೀಕ್ಷೆ ಮಾಡಿಸಲು 12 ಸಾವಿರ ಹಣ ಕಟ್ಟಬೇಕಾಗಿದೆ ಎಂದರು.
ಭಾರತದಲ್ಲಿ ಈಗಾಗಲೆ 18ವರ್ಷ ಮೇಲ್ಪಟ್ಟವರಿಗೆ ಎರಡು ಹಂತದ ಲಸಿಕೆ ನೀಡಲಾಗಿದ್ದು, ಮುಂದೆ 60ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲು ಸಿದ್ಧತೆ ನಡೆದಿದೆ ಎಂದರು.
ಇದೀಗ ದೇಶದಾದ್ಯಂತ 15 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 30 ಸಾವಿರಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗುವುದೆಂದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್, ಚೌಡ್ಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಉಪಾಧ್ಯಕ್ಷೆ ಮಂಜುಳಾ ಸುಬ್ರಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.