ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯನಾಡು ದುರಂತ ಸಂಬಂಧಿಸಿ ಪರಿಹಾರ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ.
ಸದನದಲ್ಲಿ ನಿರ್ಣಯ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್, ವಯನಾಡಿನ ವಿವಿಧ ಪ್ರದೇಶಗಳಲ್ಲಿ ಭೂಕುಸಿತದಿಂದ ಉಂಟಾದ ಸಂಕಷ್ಟಗಳ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಲಾಗಿದೆ. ಆದರೆ ತಕ್ಷಣದ ನೆರವು ಬಿಡುಗಡೆಯಾಗಿಲ್ಲ. ಕೇಂದ್ರದ ಈ ವಿಳಂಬ ಧೋರಣೆಯಿಂದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯ ವಿಳಂಬವಾಗುತ್ತಿದೆ ಎಂದರು.
ಇದೇ ಸಂದರ್ಭ, ದೇಶದಲ್ಲಿ ವರದಿಯಾದ ಅತ್ಯಂತ ಭೀಕರ ಭೂಕುಸಿತ ಇದು ಎಂದು ಪರಿಗಣಿಸಿ ಶೀಘ್ರದಲ್ಲೇ ಹಣಕಾಸು ನೆರವು ನೀಡಲು ಕೇಂದ್ರ ಸರ್ಕಾರ ಕ್ರಮಗೊಳ್ಳಬೇಕು, ಸಂತ್ರಸ್ತರು ಬ್ಯಾಂಕ್ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಲಾಯಿತು. ಇದಾದ ಬಳಿಕ ಸ್ಪೀಕರ್ ಎ.ಎನ್. ಶಮೀರ್, ಸದನವು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ಘೋಷಿಸಿದರು.