August 18, 2026
Tuesday, August 18, 2026
spot_img

CJP ಹೋರಾಟಕ್ಕೆ ಮಣಿದ ಕೇಂದ್ರ: ಶಿಕ್ಷಣ ಸಚಿವರ ರಾಜೀನಾಮೆ ಪತ್ರದಲ್ಲೇನಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಯುಜಿ ಪರೀಕ್ಷೆ ಅಕ್ರಮದ ನೈತಿಕ ಜವಾಬ್ದಾರಿ ಹೊರಬೇಕೆಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಬೃಹತ್ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಪ್ರಧಾನಿಯವರಿಗೆ 2 ಪುಟಗಳ ಸುದೀರ್ಘ ಪತ್ರ ರವಾನಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯವೇ ನನ್ನ ಮೊದಲ ಆದ್ಯತೆ

ತಮ್ಮ ಪದತ್ಯಾಗದ ಪತ್ರದಲ್ಲಿ ಮಾತನಾಡಿದ ಪ್ರಧಾನ್, “ನಾಲ್ಕು ದಶಕಗಳಿಂದ ಶಿಕ್ಷಣ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದೇನೆ. ದೇಶದ ಯುವಜನತೆಯ ಕನಸುಗಳನ್ನು ಈಡೇರಿಸುವುದು ನೈತಿಕ ಕರ್ತವ್ಯವಾಗಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಮೇ 3ರಂದು ನಡೆದ ಪರೀಕ್ಷಾ ಅಕ್ರಮ ಬಯಲಾದ ತಕ್ಷಣವೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ, ಮರುಪರೀಕ್ಷೆಗೆ ಆದೇಶಿಸಲಾಯಿತು” ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ವರ್ಷದಿಂದ ಸಂಪೂರ್ಣ ‘ಸಿಬಿಟಿ’ ಮಾದರಿ

ಮುಂದಿನ ಶೈಕ್ಷಣಿಕ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಜೂನ್ 21ರಂದು 20 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳಿಗೆ ಜಿಲಾಡಳಿತಗಳ ಸಹಕಾರದೊಂದಿಗೆ ಪರೀಕ್ಷೆ ಯಶಸ್ವಿಯಾಗಿ ಮುಗಿದಿದೆ. ಪರೀಕ್ಷಾ ಮಾಫಿಯಾದಿಂದಾಗಿ ಯಾವೊಬ್ಬ ಅರ್ಹ ವಿದ್ಯಾರ್ಥಿಗೂ ಅನ್ಯಾಯವಾಗಬಾರದು ಎಂಬ ಕಾರಣಕ್ಕೆ ಮೊದಲ ದಿನದಿಂದಲೂ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಕಾರ್ಯನಿರ್ವಹಿಸಿದ್ದೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !