ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿನ ಆಹಾರ ಗುಣಮಟ್ಟ ಕಾಯ್ದುಕೊಳ್ಳಲು, ದೇಶದಲ್ಲಿಯೇ ಮೊದಲ ಬಾರಿಗೆ ತಂತ್ರಜ್ಞಾನ ಆಧಾರಿತ ಆಹಾರ ಪಾರದರ್ಶಕತೆ ಮತ್ತು ಸಾಮಾಜಿಕ ಪರಿಶೋಧನೆಗೆ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.
ಈ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿಶಾಲೆಗಳ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ, ರಾತ್ರಿ ಊಟಕ್ಕೆ ಏನನ್ನು ಕೊಡಲಾಗುತ್ತಿದೆ ಎಂಬುದರ ಬಗ್ಗೆ ಆಯಾ ವಸತಿನಿಲಯಗಳ ಶಿಕ್ಷಕರು, ವಾರ್ಡನ್ ಗಳು ಪೋಟೋ ತೆಗೆದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡುತ್ತಿದ್ದಾರೆ. ಇದನ್ನು ಪರಿಶೀಲಿಸುವ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಲ್ಲಿಯೇ ವ್ಯಕ್ತಪಡಿಸಬಹುದು. ಜತೆಗೆ ಇಲಾಖಾ ಮಟ್ಟದ ಅಧಿಕಾರಿಗಳು ಶುಚಿತ್ವ, ಗುಣಮಟ್ಟ ಪರಿಶೀಲಿಸಿ ಜಿಲ್ಲೆಗಳಿಗೆ ಶ್ರೇಯಾಂಕ ನೀಡುತ್ತಾರೆ.
ಈ ಕುರಿತು ಮಾತನಾಡಿದ ಚಾಮರಾಜನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಪೋಷಕರು ಹಾಗೂ ಇಲಾಖೆಯ ನಡುವೆ ಸಮನ್ವಯತೆ ಕಾಯ್ದುಕೊಂಡು, ಪಾರದರ್ಶಕತೆ ಕಾಪಾಡಿಕೊಳ್ಳಲು ಈ ಯೋಜನೆಯು ಸಹಕಾರಿಯಾಗಿದೆ ಎಂದು ಹೇಳಿದರು.