ಹೊಸದಿಗಂತ ವರದಿ ಮಡಿಕೇರಿ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದಿಂದ ಮಡಿಕೇರಿ ಹೊರವಲಯದ ಕೆ.ಬಾಡಗದಲ್ಲಿರುವ ಗಾಲ್ಫ್ ಮೈದಾನದ ಹೆಲಿಪ್ಯಾಡ್ಗೆ ಬಂದಿಳಿಯಲಿದ್ದಾರೆ.
ಅಂದು ಮಧ್ಯಾಹ್ನ 12.15ಕ್ಕೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಮಡಿಕೇರಿ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಪರಾಹ್ನ 2.45ಕ್ಕೆ ರಸ್ತೆ ಮೂಲಕ ನಾಪೋಕ್ಲುವಿಗೆ ತೆರಳಲಿರುವ ಬೊಮ್ಮಾಯಿ ಅವರು, 3.10 ನಿಮಿಷಕ್ಕೆ ಅಲ್ಲಿನ ಬೇತು ಗ್ರಾಮದಲ್ಲಿರುವ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಆಯೋಜಿಸಿರುವ 23ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸಂಜೆ 4 ಗಂಟೆಗೆ ನಾಪೋಕ್ಲುವಿನಿಂದ ಹೊರಟು ರಸ್ತೆ ಮೂಲಕ ಮಡಿಕೇರಿ ಹೊರವಲಯದ ಗಾಲ್ಫ್ ಮೈದಾನಕ್ಕೆ ಆಗಮಿಸಲಿರುವ ಅವರು ಸಂಜೆ 4.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.