ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, “ಒಂದು ರಾಷ್ಟ್ರ ಒಂದು ಚುನಾವಣೆʼ ನಡೆಸಲು ಚುನಾವಣಾ ಆಯೋಗ ಸಂಪೂರ್ಣ ಸನ್ನದ್ಧವಾಗಿದೆ ಎಂದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸುಶೀಲ್ ಚಂದ್ರ, ‘ಒಂದು ರಾಷ್ಟ್ರ ಒಂದು ಚುನಾವಣೆ ಉತ್ತಮ ಪ್ರಕ್ರಿಯೆಯಾಗಿದೆ. ಈ ಮಾದರಿಯ ಚುನಾವಣೆ ನಡೆಸಲು ಅನುಮತಿ ಸಿಕ್ಕರೆ, ಏಕಕಾಲದಲ್ಲಿ ಚುನಾವಣೆ ನಡೆಸಲು ಆಯೋಗ ಸಮರ್ಥವಾಗಿದೆ ಎಂದರು.
ಎಲ್ಲಾ ಚುನಾವಣೆಗಳು ಏಕಕಾಲಕ್ಕೆ ನಡೆಯುವುದು ಉತ್ತಮ ಎಂಬ ಅಂಶ ಸಂವಿಧಾನದಲ್ಲಿದೆ. ಸಂಸತ್ ಚುನಾವಣೆಗಳು ಏಕಕಾಲಕ್ಕೆ ನಡೆಯುತ್ತವೆ. ಆದರೆ ಇದು ವಿಧಾನಸಭಾ ಚುನಾವಣೆಯಲ್ಲಿ ಸಾಧ್ಯವಾಗಿಲ್ಲ. ವಿಧಾನಸಭೆ ವಿಸರ್ಜನೆ ವೇಳಾಪಟ್ಟಿ ಬದಲಾವಣೆ, ಮತ್ತಿತರೆ ಕಾರಣಗಳಿಂದಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಸಮಯದಲ್ಲಿ ಚುನಾವಣೆ ನಡೆಯುತ್ತಿದೆ.
ಒಂದು ರಾಷ್ಟ್ರ ಒಂದು ಚುನಾವಣೆ ಉತ್ತಮ ಸಲಹೆಯಾಗಿದೆ. ಇದು ಸಾಧ್ಯವಾಗಬೇಕಾದರೆ ಸಂವಿಧಾನದಲ್ಲಿ ಕೆಲ ಬದಲಾವಣೆಗಳ ಅಗತ್ಯವಿದ್ದು, ಸಂಸತ್ತಿನಲ್ಲಿ ಈ ಕುರಿತು ನಿರ್ಣಯವಾಗಬೇಕಿದೆ ಎಂದು ಅವರು ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ