ಹೊಸದಿಗಂತ ವರದಿ ಚಿತ್ರದುರ್ಗ:
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಗುರುವಾರ ಜೈಲಿಂದ ಬಿಡುಗಡೆ ಸಿಕ್ಕಿದೆ. ಬಿಡುಗಡೆ ಹಿನ್ನೆಲೆಯಲ್ಲಿ ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸೇರಿದಂತೆ ಅನೇಕ ಅಭಿಮಾನಿಗಳು ಕಾರಾಗೃಹದ ಬಳಿ ನೆರೆದಿದ್ದರು.
ಮೊದಲ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿತ್ತು. ಅಲ್ಲದೇ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಬಿಡುಗಡೆಗೆ ಆದೇಶ ಹೊರಡಿಸಿತ್ತು. ಅದರಂತೆ ಗುರುವಾರ ಶಿವಮೂರ್ತಿ ಶರಣರನ್ನು ಬಿಡುಗಡೆ ಮಾಡಲಾಗಿದೆ.
ಬಿಡುಗಡೆಯ ನಂತರ ಅವರು ಕಾರಿನಲ್ಲಿ ದಾವಣಗೆರೆಯತ್ತ ತೆರಳಿದ್ದಾರೆ. ದಾವಣಗೆರೆಯ ವಿರಕ್ತ ಮಠದಲ್ಲಿ ಅವರು ತಂಗುವರು ಎನ್ನಲಾಗಿದೆ. ಅಲ್ಲದೇ ಪೋಕ್ಸೊ ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕಿದೆ.