August 17, 2026
Monday, August 17, 2026
spot_img

ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಚಿತ್ರದುರ್ಗ:

ಕನಿಷ್ಠ ವೇತನ ಜಾರಿಗೊಳಿಸಿ ಸೇವಾ ಭದ್ರತೆ ಒದಗಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಸೇವಾ ಖಾಯಮಾತಿಗೆ ಒತ್ತಾಯಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಗೌಡ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 15-20 ವರ್ಷಗಳಿಂದಲೂ ಕಡಿಮೆ ಸಂಬಳಕ್ಕಾಗಿ ದುಡಿಯುತ್ತಿದ್ದಾರೆ. ಯಾವುದೇ ಜೀವನ ಭದ್ರತೆಯಿಲ್ಲ ಎಂದು ದೂರಿದರು.

ವಸತಿ ನಿಲಯ, ಶಾಲಾ-ಕಾಲೇಜುಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು, ಕಾವಲುಗಾರರು, ಡಿ.ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು ಹೊರ ಗುತ್ತಿಗೆ ಅತಿಥಿ ಶಿಕ್ಷಕರುಗಳು ಕೆಲಸ ಮಾಡುತ್ತಿದ್ದಾರೆ. ಅವರುಗಳನ್ನೆಲ್ಲಾ ಖಾಯಂಗೊಳಿಸಿ ಕನಿಷ್ಠ ವೇತನ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಯಶವಂತ್ ಪ್ರತಿಭಟನೆಯನ್ನುದೇಶಿಸಿ ಮಾತನಾಡಿ, ಮೇ ತಿಂಗಳಿನಲ್ಲಿ ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ವೇತನ ಪರಿಷ್ಕರಣೆ ಕುರಿತು ಕರಡು ಅಂತಿಮ ಅಧಿಸೂಚನೆ ಹೊರಡಿಸಿದ್ದು, ವಿಳಂಬ ಮಾಡದೆ ಕನಿಷ್ಠ ವೇತನವನ್ನು ತಕ್ಷಣ ನೀಡಬೇಕು. ತಿಂಗಳಿಗೆ ಕನಿಷ್ಠ 36 ಸಾವಿರ ರೂ.ಗಳ ವೇತನ ಕೊಡಬೇಕೆಂದು ಒತ್ತಾಯಿಸಿದರು.

ಎಲ್ಲಾ ಹಾಸ್ಟೆಲ್ ಮತ್ತು ವಸತಿ ನಿಲಯ ಹೊರಗುತ್ತಿಗೆ ಸಿಬ್ಬಂದಿಗಳಿಗೆ ನಿವೃತ್ತಿಯವರೆಗೂ ಸೇವಾ ಭದ್ರತೆ ಒದಗಿಸಿ ಕೆಲಸ ಮಾಡುವ ಸ್ಥಳಗಳಲ್ಲಿಯೇ ಖಾಯಂಗೊಳಿಸಿ ನೇರವಾಗಿ ಇಲಾಖೆಯಿಂದ ವೇತನ ಪಾವತಿಸಬೇಕು. ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐ.ಡಿ.ಕಾರ್ಡ್, ಸರ್ವಿಸ್ ಸರ್ಟಿಫಿಕೇಟ್, ಇಎಸ್‌ಐ. ಮತ್ತು ಪಿ.ಎಫ್. ಹಣ ಪಾವತಿಸಿರುವುದಕ್ಕೆ ಸಂಬಂಧಿಸಿದಂತೆ ರಶೀದಿ ಕೊಡಬೇಕೆಂದು ಆಗ್ರಹಿಸಿದರು.

ಕಾರ್ಮಿಕರ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ಕೊಡಬೇಕು. ಕೆಲಸದ ಸಮಯ ನಿಗಧಿಪಡಿಸಿ ಅಪಘಾತಕ್ಕೊಳಗಾದಾಗ ಚಿಕಿತ್ಸೆ ವೆಚ್ಚವನ್ನು ಇಲಾಖೆಯ ಪಾವತಿಸಿ ಪರಿಹಾರ ನೀಡಬೇಕು. ಪ್ರತಿ ತಿಂಗಳು ಐದನೆ ತಾರೀಖಿಗೆ ಸಂಬಳ ನೀಡಿ ಬಾಕಿಯಿರುವ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದರು.

ಇದನ್ನೂ ಓದಿ:

ಹಿಂದುಳಿದ ವರ್ಗ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತಗೊಳಿಸಿರುವ ಆದೇಶವನ್ನು ಸರ್ಕಾರ ರದ್ದುಪಡಿಸಿ 50 ವಿದ್ಯಾರ್ಥಿಗಳಿಗೆ ಮೂವರು ಸಿಬ್ಬಂದಿಯಂತೆ ನೇಮಿಸಿ ಹಿಂದಿನ ಪದ್ದತಿಯನ್ನು ಅನುಸರಿಸಬೇಕು. ಹೊರ ಗುತ್ತಿಗೆ ಅತಿಥಿ ಶಿಕ್ಷಕರುಗಳನ್ನು ಖಾಯಂಗೊಳಿಸಿ ಸೇವಾ ಭದ್ರತೆ ಕಲ್ಪಿಸಿ ಕನಿಷ್ಠ ವೇತನ ನೀಡುವುದು ಸೇರಿದಂತೆ ಒಟ್ಟು 21 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ವಿನಂತಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುನಿತ್‌ಕುಮಾರ್, ಮಧು, ಶಕ್ತಿಪ್ರಸಾದ್, ಮಂಜುನಾಥ್, ರೇಖಮ್ಮ, ಗಂಗಮ್ಮ, ತಿಮ್ಮೇಶ್, ಮಂಜುನಾಥ, ಗೋವಿಂದ್, ಉಮೇಶ್, ಸೋಮಶೇಖರ್ ಹಾಗೂ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !