ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆ ಬಹಳ ದಿನಗಳಿಂದ ಕಾಡುತ್ತಿತ್ತು. ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎನ್ನಲಾಗಿದ್ದು. ಇದೀಗ ಕುಮಾರಸ್ವಾಮಿ ಅವರನ್ನು ಗೆಲುವಿನತ್ತ ಕೊಂಡೊಯ್ಯಲು ಬಿಜೆಪಿ-ಜೆಡಿಎಸ್ ಮುಖಂಡರು, ಕಾರ್ಯಕರ್ತರು ತಂತ್ರ ರೂಪಿಸಲು ಸಜ್ಜಾಗಿದ್ದಾರೆ.
ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸುವುದು ಈ ತಂತ್ರದ ಮೊದಲ ಭಾಗವಾಗಿದೆ. ಹೀಗಾಗಿ ಇಂದು ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಯಲಿದೆ.
ಕುಮಾರಸ್ವಾಮಿ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಈಗಾಗಲೇ ಮಂಡ್ಯದ ಕೆಲ ನಾಯಕರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮುಂದಾಗಿದ್ದಾರೆ. ಮಾಜಿ ಸಚಿವ ನಾರಾಯಣಗೌಡ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಕುಮಾರಸ್ವಾಮಿ ಅವರೇ ನಾರಾಯಣ ಗೌಡ ಅವರ ಮನೆಗೆ ತೆರಳಿ ಅವರಿಬ್ಬರ ಭಿನ್ನಾಭಿಪ್ರಾಯವನ್ನು ಬಗೆಹರಿಸಿದ್ದಾರೆ.
ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಇಂದು ಸಮನ್ವಯ ಸಭೆ ನಡೆಸಲಾಗಿದ್ದು. ಈ ಸಭೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಪುಟ್ಟರಾಜು, ತಮ್ಮಣ್ಣ, ಸಾ.ರಾ.ಮಹೇಶ್, ನಾರಾಯಣಗೌಡ ಸೇರಿದಂತೆ ಮಾಜಿ ಶಾಸಕರು ಹಾಗೂ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ಕುಮಾರಸ್ವಾಮಿ ಗೆಲುವಿಗೆ ಏನು ಮಾಡಬೇಕು ಎಂಬುದರ ಕುರಿತು ಸುದೀರ್ಘ ಚರ್ಚೆ ನಡೆಯಲಿದ್ದು, ಆಯಾಯ ಭಾಗದ ಮುಖ್ಯಸ್ಥರಿಗೆ ಹಲವು ಕಾರ್ಯಗಳನ್ನು ನೀಡಲಾಗುವುದು ಎನ್ನಲಾಗಿದೆ.