ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ಹಿಸಾರ್ ಜಿಲ್ಲೆಯ ಖೇಡಿ ಚೋಪ್ಟಾ ಗ್ರಾಮದಿಂದ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಘರ್ಷಣೆ ಸಂಭವಿಸಿದ್ದು, ರೈತರ ಮೇಲೆ ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿದರು.
‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಸಲುವಾಗಿ ಖನೌರಿ ಗಡಿಯಲ್ಲಿರುವ ರೈತರಿಗೆ ಬೆಂಬಲ ಸೂಚಿಸಿ, ಅಲ್ಲಿಗೆ ಹೊರಟಿದ್ದ ರೈತರನ್ನು ಪೊಲೀಸರು ತಡೆದರು. ಆಕ್ರೋಶಗೊಂಡ ರೈತರು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆದರು.ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ಸಂಭವಿಸಿತು.
ಹರಿಯಾಣ ಪೊಲೀಸರು ಪ್ರತಿಭಟನೆ ನಿರತರ ವಿರುದ್ಧ ಅಶ್ರುವಾಯು ಶೆಲ್ಗಳನ್ನು ಸಿಡಿಸಿ, ಲಾಠಿ ಪ್ರಹಾರ ನಡೆಸಿದರು. ಘರ್ಷಣೆಯಲ್ಲಿ ಕೆಲ ಪೊಲೀಸರು ಮತ್ತು ರೈತರು ಗಾಯಗೊಂಡರು.
ಘರ್ಷಣೆಯ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಹೃದಯಾಘಾತದಿಂದ ರೈತ ಸಾವು
ಖನೌರಿ ಗಡಿಯಲ್ಲಿ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 62 ವರ್ಷದ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ರೈತ ಮುಖಂಡ ಸರವಣ ಸಿಂಗ್ ಪಂಢೇರ್ ಶುಕ್ರವಾರ ತಿಳಿಸಿದ್ದಾರೆ. ಪಂಜಾಬಿನ ಬಠಿಂಡಾ ಜಿಲ್ಲೆಯ ಅಮರ್ಗಢ ಗ್ರಾಮದ ದರ್ಶನ್ ಸಿಂಗ್ ಮೃತ ರೈತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.