ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಗೆ ರಾಜಕೀಯಅಖಾಡ ಸಜ್ಜಾಗುತ್ತಿದ್ದು, ವಿವಿಧ ಪಕ್ಷಗಳು ಗೆಲುವಿಗಾಗಿ ಹೊಸ ಹೊಸ ಯೋಜನೆಯತ್ತ ಕಣ್ಣಿಟ್ಟಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದಲ್ಲಿ ಸಂಜೆ ರ್ಯಾಲಿ ನಡೆಸಲಿದ್ದಾರೆ.
ಆದ್ರೆ ಅದಕ್ಕೂ ಮುನ್ನವೇ, ಕೋಲ್ಕತ್ತಾದ ಗಿರೀಶ್ ಪಾರ್ಕ್ ಬಳಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ಮೋದಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಬ್ರಿಗೇಡ್ ಪರೇಡ್ ಮೈದಾನದ ಬಳಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಬಿಜೆಪಿ ಕಾರ್ಯಕರ್ತರು ಪ್ರಧಾನಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾ ರ್ಯಾಲಿ ಸ್ಥಳದ ಕಡೆಗೆ ತೆರಳುತ್ತಿದ್ದಾಗ ಕೆಲವು ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಕಲ್ಲುಗಳನ್ನು ಎಸೆಯಲಾಯಿತು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಸ್ಥಳೀಯ ಟಿಎಂಸಿ ಕಾರ್ಯಕರ್ತರು ಈ ಆರೋಪಗಳನ್ನು ನಿರಾಕರಿಸಿದ್ದು, ಬಿಜೆಪಿ ಬೆಂಬಲಿಗರೇ ಮೊದಲು ನಿಂದಿಸಲು ಮತ್ತು ಕಲ್ಲು ತೂರಾಟ ನಡೆಸಲು ಆರಂಭಿಸಿದರು ಎಂದು ಹೇಳಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಎರಡೂ ಪಕ್ಷಗಳ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಘರ್ಷಣೆಯ ವೇಳೆ ಹಲವು ವಾಹನಗಳು ಹಾನಿಗೀಡಾಗಿವೆ.



