ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದಿ ವ್ಯಾಪಾರಿಗಳ ಸಂಘಟನೆಗಳು ನಗರಾದ್ಯಂತ ಬಂದ್ ಹಾಗೂ ಬೃಹತ್ ಪ್ರತಿಭಟನೆಗೆ ನಾಳೆ ಬುಧವಾರ ಕರೆ ನೀಡಿವೆ.
ಈಗ ನಗರದಾದ್ಯಂತ ನಡೆಯುತ್ತಿರುವ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಗಳು ಬೀದಿ ವ್ಯಾಪಾರಿಗಳ (ಜೀವನೋಪಾಯದ ರಕ್ಷಣೆ ಮತ್ತು ಬೀದಿ ವ್ಯಾಪಾರದ ನಿಯಂತ್ರಣ) ಕಾಯ್ದೆ, 2014 ನ್ನು ಉಲ್ಲಂಘಿಸುತ್ತಿವೆ ಎಂದು ಅವು ಆರೋಪಿಸಿವೆ.
ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ರಾಜ್ಯ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿರುದ್ಧ ಅಕ್ರಮ ತೆರವು ಕಾರ್ಯಾಚರಣೆ ನಡೆಸುತ್ತಿರುವುದಾಗಿ ಆರೋಪಿಸಿದೆ. ಕಾನೂನುಬದ್ಧ ಪ್ರಕ್ರಿಯೆ ಅನುಸರಿಸದೆ ವ್ಯಾಪಾರಿಗಳ ತಳ್ಳುಗಾಡಿಗಳು ಹಾಗೂ ಸರಕುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ಸಾವಿರಾರು ಬೀದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡಲಾಗಿದೆ ಎಂದು ಸಮಿತಿ ದೂರಿದೆ.
ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಾರ್ವಜನಿಕರಿಗೆ ಸುಗಮವಾಗಿರಬೇಕು ಎಂಬುದಕ್ಕೆ ನಾವು ವಿರೋಧಿಗಳಲ್ಲ. ಆದರೆ ಬೀದಿ ವ್ಯಾಪಾರವನ್ನು ನಿಯಂತ್ರಿಸಲು ಅನುಸರಿಸಬೇಕಾದ ಸ್ಪಷ್ಟ ವಿಧಾನವನ್ನು ಕಾಯ್ದೆ ತಿಳಿಸಿದೆ. ಆ ಕಾಯ್ದೆಯನ್ನು ಜಾರಿಗೊಳಿಸುವ ಬದಲು ಅಧಿಕಾರಿಗಳು ಕಾನೂನು ಪ್ರಕ್ರಿಯೆ ಪಾಲಿಸದೆ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಎಸ್. ಬಾಬು ಹೇಳಿದರು.



