ಹೊಸದಿಗಂತ ವರದಿ ಮಂಡ್ಯ:
ಟನ್ ಕಬ್ಬಿಗೆ ವೈಜ್ಞಾನಿಕ ಬೆಲೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಸಭೆಯಲ್ಲಿ ಭರವಸೆ ನೀಡಿದ್ದರು. ಆದರೆ, ಮಾತು ಕೊಟ್ಟಂತೆ ನಡೆದುಕೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಟನ್ ಕಬ್ಬಿಗೆ 4500 ರೂ., ಲೀಟರ್ ಹಾಲಿಗೆ 40 ರೂ. ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಕಳೆದ 8 ದಿನಗಳಿಂದ ಸರ್ ಎಂ.ವಿ. ಪ್ರತಿಮೆ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೆನೆ ಎಂದರು.
ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ರೈತರು ಒತ್ತಾಯ ಮಾಡುತ್ತಿದ್ದಾರೆ. ಈ ಸಂಬಂಧವಾಗಿ ಸರ್ಕಾರಕ್ಕೆ ಈಗಾಗಲೇ ಒತ್ತಾಯ ಮಾಡಿದ್ದೇನೆ. ಸಚಿವರು ರೈತರ ಬಳಿ ಬಂದರೆ ಬರೀ ಸುಳ್ಳು ಹೇಳಿ ಹೋಗ್ತಾರೆ. ಇದು ಸುಳ್ಳಿನ ಸರ್ಕಾರ ಎಂದು ಛೇಡಿಸಿದರು.
ಇಡಬ್ಲ್ಯೂಎಸ್ ಮೀಸಲಾತಿಗೆ ತಮಿಳುನಾಡಿನ ಡಿಎಂಕೆ ವಿರೋಧದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಅದನ್ನು ಪುನರ್ ಪರಿಶೀಲನೆ ಮಾಡ್ತಿವಿ ಅಂತ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಹಿಂದುಳಿದವರಿಗೆ ಶೇ. 10ರಷ್ಟ ಮೀಸಲಾತಿ ಕೊಡಬೇಕು ಎಂದು ಹೇಳಿಲ್ಲ, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹೈಕಮಾಂಡ್ ತೀರ್ಮಾನ:
ಕೋಲಾರದಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ನಾನು ಎಲ್ಲಿ ಸ್ಪರ್ಧಿಸಬೇಕು ಎನ್ನುವುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ, ರುದ್ರಪ್ಪ, ರೈತ ಮುಖಂಡರಾದ ಲಿಂಗಪ್ಪಾಜಿ, ಎಸ್.ಸಿ. ಮಧುಚಂದನ್ ಇತರರಿದ್ದರು.