ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಕಲಬುರಗಿ
ಪಿ.ಎಸ್.ಐ. ಅಕ್ರಮ ನೇಮಕಾತಿ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರನ್ನು‌ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.‌ ಪ್ರಕರಣದ ಹಿಂದೆ ಯಾರಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.
ಎರಡು ದಿನಗಳ ಪ್ರವಾಸಕ್ಕೆ ಗುರುವಾದ ಕಲಬುರಗಿಗೆ ಆಗಮಿಸಿದ ಅವರು ನಗರದ ಡಿ.ಎ.ಆರ್. ಪರೇಡ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಅಕ್ರಮ‌ ನೇಮಕಾತಿ ಬಗ್ಗೆ ಪ್ರಾಥಮಿಕ ತನಿಖೆಯಿಂದ‌ ಮಾಹಿತಿ ಬಂದ ಕೂಡಲೇ ನಮ್ಮ ಸರ್ಕಾರ ಹೆಚ್ಚಿನ ತನಿಖೆಗಾಗಿ ಸಿ.ಐ.ಡಿ.ಗೆ ವಹಿಸಿದೆ. ಸಿ.ಐ.ಡಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಕಲಬುರಗಿಯಲ್ಲಿ ಕೆಲವರನ್ನು ಬಂಧಿಸಿ ವಿಚಾರಣೆ‌ ಸಹ ನಡೆಸುತ್ತಿದೆ ಎಂದರು.
ಪಿ‌.ಎಸ್.ಐ ನೇಮಕಾತಿ ಮರು ಪರೀಕ್ಷೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿ.ಎಂ., ಈ ಕುರಿತಂತೆ ತನಿಖೆಯ ಮಧ್ಯಂತರ ವರದಿ ಕೇಳಲಾಗಿದೆ. ವರದಿ ಬಂದ ನಂತರ‌‌ ನಿರ್ಧರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ, ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ದತ್ತಾತ್ರೆಯ ಪಾಟೀಲ ರೇವೂರ, ಶಾಸಕರಾದ‌ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕರಾದ ಶಶಿಲ್ ಜಿ. ನಮೋಶಿ, ಸುನೀಲ್ ವಲ್ಯಾಪೂರೆ,‌ ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಮಾಜಿ ಶಾಸಕ‌ ದೊಡ್ಡಪ್ಪಗೌಡ ಪಾಟೀಲ‌ ನರಿಬೋಳ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!