ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ರೆ ದೇಶದಲ್ಲಿ ಅಲ್ಲೋಲಕಲ್ಲೋಲವೇ ಸೃಷ್ಟಿ ಆಗುತ್ತಿತ್ತು. ಸಾವಿರಾರು ಜನರ ಸಾವು ಆಗುತ್ತಿತ್ತು. ಆದರೆ, ಮೋದಿ ಅವರು ಅಧಿಕಾರದಲ್ಲಿ ಇದ್ದ ಕಾರಣ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದರು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸಾಲದ ಹೊರೆ ಕೊಟ್ಟದ್ದು ಕಾಂಗ್ರೆಸ್. ಜನರಿಗೆ ಮೋಸ ಮಾಡುವುದು, ಸುಳ್ಳು, ಭ್ರಷ್ಟಾಚಾರ, ಜಾತಿ, ಮತಗಳನ್ನು ಒಡೆಯುವ ಕೆಲಸವನ್ನು ಮಾಡುವುದು ಕಾಂಗ್ರೆಸ್ ಮಾತ್ರ.
ರಾಜ್ಯದ ಹಿನ್ನಡೆಗೆ ಕಾಂಗ್ರೆಸ್ ಕಾರಣ. ನೈಜ ಸಾಮಾಜಿಕ ನ್ಯಾಯವನ್ನು ಬಿಜೆಪಿ ಮೀಸಲಾತಿ ಮೂಲಕ ಕೊಟ್ಟಿದೆ ಎಂದು ವಿವರ ನೀಡಿದರು. ಇದು ಕಾಂಗ್ರೆಸ್ ಹೊಟ್ಟೆಯಲ್ಲಿ ತಳಮಳಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ನೀಡಲಾಗುತ್ತಿದೆ. ನಮ್ಮದು ಜನಸಮಸ್ಯೆಗೆ ಸ್ಪಂದಿಸುವ-ನಿರ್ಣಾಯಕ ಸರ್ಕಾರ ಎಂದು ನೆನಪಿಸಿದರು. ಮತ್ತೆ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾರಣಕರ್ತರು ಪ್ರಧಾನಿ ಮೋದಿ ಎಂದರು. ದೇಶದ ಆರ್ಥಿಕ ಸ್ಥಿತಿಯನ್ನು ಸರಿ ದಾರಿಗೆ ತಂದು ದೇಶವನ್ನು ಮುನ್ನಡೆಸಿದವರು. ದೇಶದ ಅಮೃತ ಕಾಲಕ್ಕೆ ಭದ್ರ ಬುನಾದಿ ಹಾಕಲು 2023ರಲ್ಲಿ ಕರ್ನಾಟಕದಲ್ಲಿ ಬಿಜೆಪಿ, 2024ರಲ್ಲಿ ದೇಶದಲ್ಲಿ ಬಿಜೆಪಿ ಅಧಿಕಾರ ಪಡೆಯಬೇಕಿದೆ. ಬಿಜೆಪಿಗೆ ಮತ ಹಾಕಿ, ಮತ ಹಾಕಿಸಿ ಎಂದು ಮನವಿ ಮಾಡಿದರು.