ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಸಿಎಂ ಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಬಲ ಸ್ಪರ್ಧಿ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ, “ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರ ನಂತರ ಮುಖ್ಯಮಂತ್ರಿ ರೇಸ್ನಲ್ಲಿರುವುದು ಡಿ.ಕೆ. ಶಿವಕುಮಾರ್ ಮಾತ್ರ. ಬೇರೆ ನಾಯಕರು ರೇಸ್ನಲ್ಲಿದ್ದರೂ, ಕಾಲಕ್ಕೆ ತಕ್ಕಂತೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಆದರೆ, ಈ ಅವಧಿಯಲ್ಲೇ ಡಿಕೆಶಿಗೆ ರಾಜ್ಯದ ಚುಕ್ಕಾಣಿ ಹಿಡಿಯಲು ಅವಕಾಶ ಸಿಗಲಿದೆ ಎಂಬ ವಿಶ್ವಾಸ ನಮಗಿದೆ,” ಎಂದರು.
ಸಂಪುಟ ಪುನರಚನೆ ಅಥವಾ ವಿಸ್ತರಣೆಯ ಬಗ್ಗೆ ಮಾತನಾಡಿದ ಅವರು, “ನಾವು ಹೈಕಮಾಂಡ್ಗೆ ಈ ಬಗ್ಗೆ ಈಗಾಗಲೇ ಮನವಿ ಮಾಡಿದ್ದೇವೆ. ಹೈಕಮಾಂಡ್ ಬಹಳ ಪ್ರಬಲವಾಗಿದೆ, ಆದರೆ ವಿಸ್ತರಣೆ ಯಾಕೆ ವಿಳಂಬವಾಗುತ್ತಿದೆ ಎಂಬುದು ನಮಗೂ ತಿಳಿದಿಲ್ಲ. ಸಾಧಕ-ಬಾಧಕಗಳನ್ನು ಚರ್ಚಿಸಿ ಶೀಘ್ರವೇ ಒಂದು ತೀರ್ಮಾನಕ್ಕೆ ಬರಬಹುದು. ನಾಳೆಯೇ ಸಂಪುಟ ವಿಸ್ತರಣೆಯಾದರೂ ನಮಗೆ ಸಂತೋಷವೇ,” ಎಂದು ತಿಳಿಸಿದರು.



