ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ನಿಂದ ಸಿ.ಎಂ.ಇಬ್ರಾಹಿಂ (CM Ibrahim) ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.
ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರ (HD DeveGowda) ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ ಇಬ್ರಾಹಿಂ (CM Ibrahim) ಅವರನ್ನು ಅಧಿಕೃತವಾಗಿ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ.
ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು (CK Nanu) ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ.
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಘೋಷಣೆಯಾದಾಗಿನಿಂದಲೂ ಇಬ್ರಾಹಿಂ ಅವರು ಪಕ್ಷದ ವಿರುದ್ಧ, ಪಕ್ಷದ ನಾಯಕರಾದ ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೇರಳ ಸೇರಿದಂತೆ ವಿವಿಧ ಸಂಘಟನೆಗಳ ಜೊತೆ ಪಕ್ಷಕ್ಕೆ ವಿರುದ್ಧವಾಗಿ ಸಭೆ ಮಾಡಿದ್ದಾರೆ. ಅಲ್ಲದೇ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ್ದರೂ ನಮ್ಮದೇ ಒರಿಜಿನಲ್ ಜೆಡಿಎಸ್ ಅಂತ ಪದೇ ಪದೇ ಹೇಳಿಕೊಂಡು ಬಂದಿದ್ದಾರೆ. ಈ ಎಲ್ಲ ಆರೋಪಗಳನ್ನು ಆಧಾರವಾಗಿಟ್ಟುಕೊಂಡು ಒಮ್ಮತದ ತೀರ್ಮಾನದೊಂದಿಗೆ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆಗೊಳಿಸಲಾಗಿದೆ.
ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ಸಂಸದ ಪ್ರಜ್ವಲ್ ರೇವಣ್ಣ ಮಾತ್ರವಲ್ಲದೇ ಪಂಜಾಬ್, ಯುಪಿ, ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ಪಶ್ಚಿಮ ಬಂಗಾಳದ ಜೆಡಿಎಸ್ ರಾಜ್ಯಾಧ್ಯಕ್ಷರು, ಕಾರ್ಯಾಧ್ಯಕ್ಷರು ಭಾಗಿಯಾಗಿದ್ದರು.