ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯಾಘಾತದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ಹೊಳಿಮಠ (45) ಅವರು ಹೃದಯಾಘಾತದಿಂದ ಇಂದು (ಸೋಮವಾರ) ಬೆಳಗ್ಗೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಎದೆನೋವು ಬಂದು ಅಲ್ಲಿಯೇ ಕುಸಿದುಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಹೊಳಿಮಠ ಅವರು ಕೊನೆಯುಸಿರೆಳೆದಿದ್ದಾರೆ. ನಾಗರಬಾವಿಯಲ್ಲಿರುವ ಯುನಿಟಿ ಲೈಫ್ ಆಸ್ಪತ್ರೆಗೆ ತೆರಳಿದ ಬಳಿಕ ದಾರಿಮಧ್ಯೆಯೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು.
ಇಂದು ಬೆಳಗ್ಗೆ ಕೂಡ 7.55ಕ್ಕೆ ಕೊನೆಯದಾಗಿ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಅವರ ಇಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಅವರು ಗೃಹ ಸಚಿವರಾದಾಗಿಂದ ಅವರೊಟ್ಟಿಗೆಯೇ ಮಾಧ್ಯಮ ಸಂಯೋಜಕರಾಗಿ ಗುರುಲಿಂಗ ಸ್ವಾಮಿ ಕೆಲಸ ಮಾಡುತ್ತಿದ್ದರು.
ಗುರುಲಿಂಗಸ್ವಾಮಿ ಹೊಳಿಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದವರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದು, 1998ರಿಂದ ವಿವಿಧ ಖಾಸಗಿ ಸುದ್ದಿವಾಹಿಗಳು ಹಾಗೂ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದರು.