ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಬಂದರೂ ಇನ್ನೂ ಸಿಎಂ ಆಯ್ಕೆ ಗೆ ಕಸರತ್ತು ನಡೆಯುತ್ತಿದ್ದು, ಈ ಬಗ್ಗೆ ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.
ಕಾವೇರಿ ಅಪಾರ್ಟ್ಮೆಂಟ್ ನಲ್ಲಿರುವಂತ ಸಹೋದರ ಡಿಕೆ ಸುರೇಶ್ ನಿವಾಸದಿಂದ ಹೊರ ಬಂದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕರ್ನಾಟಕ ಮುಂದಿನ ಸಿಎಂ ಆಯ್ಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಹೇಳಿದ್ದಾರೆ ಎಂದರು.
ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸುರ್ಜೇವಾಲ ಹೇಳಿದ್ದಾರೆ ಎಂಬುದಾಗಿ ಒಂದು ಸಾಲಿನಲ್ಲಿ ಉತ್ತರಿಸಿದ ಡಿಕೆಶಿ, ಅಲ್ಲಿಂದ ಮತ್ತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎನ್ನಲಾಗುತ್ತಿದೆ.
ಈ ನಡುವೆ ತರಾತುರಿಯಲ್ಲಿ ಸಿಎಂ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದು, .ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವಿಳಂಬವಾಗುವ ಸಾಧ್ಯತೆ ಇದೆ.