ಹೊಸದಿಗಂತ ವರದಿ ಶಿವಮೊಗ್ಗ :
ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಇರೋದೇ ಅನುಮಾನ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಶಾಸಕರನ್ನು ದೆಹಲಿಗೆ ಪಿಕ್ನಿಕ್ ಕರೆದುಕೊಂಡು ಹೊರಟಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಕೇಂದ್ರದಿಂದ ರಾಜ್ಯಕ್ಕೆ ತೆರಿಗೆ ಪಾಲು ಬರುವುದು ಬಾಕಿ ಇದ್ದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಹೋಗಿದ್ದರೆ ಸಾಕಿತ್ತು. ಆದರೆ 136 ಶಾಸಕರನ್ನು ಕರೆದುಕೊಂಡು ಹೊರಟಿದ್ದಾರೆ. ಅಲ್ಲೇನೂ ಯುದ್ಧ ಮಾಡಲು ಹೊರಟಿದ್ದೀರಾ ಎಂದು ಮಾಡಿದರು.
ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಹೋರಾಟ ನಡೆಸಿದ್ದರೆ ಯಾರ ಅಭ್ಯಂತರವೂ ಇರಲಿಲ್ಲ. ಆದರೆ ಸರ್ಕಾರದ ದುಡ್ಡಿನಲ್ಲಿ ಹೊರಟಿದ್ದಾರೆ. ಇದಕ್ಕಾಗಿ ಲಕ್ಷಾಂತರ ಖರ್ಚು ಮಾಡಿ ಜಾಹೀರಾತು ನೀಡಿದ್ದಾರೆ. ಸರ್ಕಾರದ ಹಣದಲ್ಲಿ ಶಾಸಕರನ್ನು ಕರೆದುಕೊಂಡು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡ ಇಷ್ಟೊಂದು ದಿವಾಳಿ ಆಗಿದೆಯೇ ಎಂದು ಕುಟುಕಿದರು.
ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿ.ಕೆ . ಶಿವಕುಮಾರ್ ತಮ್ಮನ್ನು ಭೇಟಿ ಮಾಡಿದ್ದರು ಎಂದು ಹೇಳಿದ್ದಾರೆ. ರಾಜ್ಯಕ್ಕೆ ತೆರಿಗೆ ಪಾಲು ಕಡಿಮೆ ಬರುತ್ತಿದ್ದರೆ ಡಿಕೆ ಶಿವಕುಮಾರ್ ಅಲ್ಲಿಯೇ ಚರ್ಚೆ ಮಾಡಬಹುದಾಗಿತ್ತು. ಆದರೆ ಅದನ್ನು ಮಾಡದೆ ಈಗ ದೆಹಲಿಯಲ್ಲಿ ಪ್ರತಿಭಟನೆಯ ನಾಟಕ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.