ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru-Mysuru Expressway) ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಅವುಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಗಡ್ಕರಿ (Nitin Gadkari) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮನವಿ ಮಾಡಿದ್ದಾರೆ.
ರಾಜ್ಯಕ್ಕೆ ಅನೇಕ ಪ್ರತಿಷ್ಠಿತ ಹೆದ್ದಾರಿ ಯೋಜನೆಗಳನ್ನು ಮಂಜೂರು ಮಾಡಿದ್ದಕ್ಕಾಗಿ ಕರ್ನಾಟಕದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳನ್ನು ತಪ್ಪಿಸಬೇಕು. ಬೈಪಾಸ್ಗಳ ಪ್ರವೇಶ ಮತ್ತು ನಿರ್ಗಮನವನ್ನು ಒದಗಿಸಿ ಮತ್ತು ರಸ್ತೆ ಬದಿಯನ್ನು ಸುಗಮಗೊಳಿಸುವ ಪ್ರಯತ್ನ ಮಾಡಬೇಕು. ಶಿರಾಡಿ ಘಾಟ್ಗೆ ಸುರಂಗ ನಿರ್ಮಾಣ ಮಾಡಬೇಕು. ರಾಷ್ಟ್ರೀಯ ಹೆದ್ದಾರಿ ಮೂಲ ಕಾಮಗಾರಿಗಳ ಮಂಜೂರಾತಿಗೆ 2023-24 ರ ವಾರ್ಷಿಕ ಯೋಜನೆ ಅಡಿಯಲ್ಲಿ 10,000 ಕೋಟಿ ರೂ. ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಅದೇ ರೀತಿ ಪ್ರವಾಹ ಹಾನಿ ದುರಸ್ತಿ (FDR) ಅಡಿಯಲ್ಲಿ 250 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ನಿರ್ವಹಣೆ ಮತ್ತು ರಿಪೇರಿ (M&R) ಅಡಿಯಲ್ಲಿ ಅನುದಾನವನ್ನು 50 ಕೋಟಿ ರೂ.ಗೆ ಹೆಚ್ಚಿಸಲು ವಿನಂತಿ ಮಾಡಿದರು. ರಾಜ್ಯ ರಸ್ತೆಗಳು ಮತ್ತು MDR ಸುಧಾರಣೆಗಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ (2023-24) 1000 ಕೋಟಿ ರೂ. ಮೊತ್ತದ ಕೇಂದ್ರೀಯ ರಸ್ತೆ ಮೂಲಸೌಕರ್ಯ ನಿಧಿಗಳ (CRIF) ಅಡಿಯಲ್ಲಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.
ಸಿಎಂ ಮನವಿ ಪತ್ರಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವ ನಿತಿನ್ ಗಡ್ಕರಿ, ರಾಜ್ಯದಲ್ಲಿ ರಸ್ತೆಗಳ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸಲಾಗುವುದು. ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆಗೆ ಅಧಿಕಾರಿಗಳು ಮತ್ತು ತಜ್ಞರ ಸಮಿತಿಯನ್ನು ಕಳುಹಿಸಿ ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.