ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆ ಮುಂದುವರೆಯುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು ತಡಮಾಡದೆ ರಾಜೀನಾಮೆ ಸಲ್ಲಿಸಬೇಕು. ಉನ್ನತ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರರು ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ ಎಲ್ಲ ಸಾಧ್ಯತೆ- ಸಂದರ್ಭಗಳಿವೆ. ಅವರು ಪ್ರಭಾವಿ ವ್ಯಕ್ತಿಯಾದ ಕಾರಣ ಸಾಕ್ಷಿ ನಾಶ ಮಾಡುವ ಸಾಧ್ಯತೆ ಎದ್ದು ಕಾಣುತ್ತದೆ ಎಂದು ನುಡಿದರು.
ಸಿಎಂ ಡಿಕೆಶಿಯವರ ರಾಜೀನಾಮೆ ಪಡೆಯಲಿ
ಶಿವಕುಮಾರ್ ಅವರು ರಾಜೀನಾಮೆ ಕೊಡದಿದ್ದರೆ, ಸಿಎಂ ಅವರೇ ಡಿಕೆಶಿಯವರಿಂದ ರಾಜೀನಾಮೆ ಪಡೆಯಲಿ. ಅವರು ರಾಜೀನಾಮೆ ಕೊಡದಿದ್ದರೆ ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಒತ್ತಾಯಿಸಲಿದ್ದೇವೆ ಎಂದು ವಿವರಿಸಿದರು.
ತನಿಖೆಗೆ ಹೈಕೋರ್ಟ್ ಆದೇಶ
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐನಲ್ಲಿ ದಾಖಲಾಗಿದ್ದ ಕೇಸಿನ ತನಿಖೆ ನಡೆಸಲು ತಡೆಯಾಜ್ಞೆ ತಂದಿದ್ದರು. ಆದರೆ ಇಂದು ಆ ತಡೆಯಾಜ್ಞೆ ತೆರವುಗೊಳಿಸಿ ತನಿಖೆ ಮುಂದುವರೆಸಲು ಹೈಕೋರ್ಟ್ ಆದೇಶ ಕೊಟ್ಟಿದೆ.
ಇಂದಿನ ಹೈಕೋರ್ಟ್ ಆದೇಶದಿಂದ ನ್ಯಾಯಕ್ಕೆ ಬೆಲೆ ಸಿಕ್ಕಿದೆ. ಇದರಿಂದ ಡಿ.ಕೆ.ಶಿವಕುಮಾರ್ರಿಗೆ ಹಿನ್ನಡೆ ಆಗಿರಬಹುದು ಅಥವಾ ಬೇಸರ ಆಗಿರಬಹುದು. ಆದರೆ ಮಾನ್ಯ ಸಿದ್ದರಾಮಯ್ಯರಿಗೆ ತುಂಬ ಖುಷಿಯಾಗಿದೆ ಎಂದರು.
ಸಿದ್ದರಾಮಯ್ಯನವರ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಿದೆ
ಸಿದ್ದರಾಮಯ್ಯರನ್ನು ಹೇಗಾದರೂ ಮನೆಗೆ ಕಳುಹಿಸಿ ನಾನು ಸಿಎಂ ಆಗಬೇಕೆಂಬುದು ಡಿ.ಕೆ.ಶಿವಕುಮಾರ್ ಪ್ರಯತ್ನ, ಈತ ಹೇಗಾದರೂ ಮತ್ತೆ ಜೈಲಿಗೆ ಹೋದರೆ ನನಗೆ ಅನುಕೂಲ ಎಂದು ಮಾನ್ಯ ಮುಖ್ಯಮಂತ್ರಿಗಳು ಹೇಳುತ್ತಿರುವುದಾಗಿ ನಿನ್ನೆವರೆಗೂ ಮಾತುಗಳು ಕೇಳಿಸಿದ್ದವು. ಇವತ್ತು ಸಿದ್ದರಾಮಯ್ಯನವರ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ ಕಾಣುತ್ತಿದೆ ಎಂದರು.
ಸುಳ್ಳಮಳ್ಳ ಪಟ್ಟ ನಿಮಗೇ ಇರಲಿ
ಬಿಜೆಪಿ ನಾಯಕರು ಸುಳ್ಳಮಳ್ಳ ನಾಯಕರು ಎಂಬ ರಾಮಲಿಂಗಾರೆಡ್ಡಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುಳ್ಳ ಯಾರು ಮಳ್ಳ ಯಾರೆಂದು ಬೆಂಗಳೂರಿನ ಜನರು ಹೇಳುತ್ತಾರೆ. ಮೆತ್ತಮೆತ್ತಗೆ ಏನೇನು ಮಾಡುತ್ತಾರೋ ಅವರನ್ನು ಮಳ್ಳ ಎನ್ನುತ್ತಾರೆ. ರಾಮಲಿಂಗಾರೆಡ್ಡಿಯವರೇ ನಿಮ್ಮನ್ನೇ ಎಲ್ಲರೂ ಮಳ್ಳ ಎಂದು ಹೇಳುತ್ತಿದ್ದಾರೆ. ಸುಳ್ಳ ಎಂದು ಸಿದ್ದರಾಮಯ್ಯ ಮತ್ತು ಕ್ಯಾಂಪ್ ಪ್ರಸಿದ್ಧಿ ಪಡೆದಿದೆ ಎಂದು ತಿರುಗೇಟು ನೀಡಿದರು. ಸುಳ್ಳಮಳ್ಳ ಪಟ್ಟ ನಿಮಗೇ ಇರಲಿ ಎಂದು ತಿಳಿಸಿದರು.