ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಗೆ ಬಂದಿರುವ ವಿವಿಧ ದೇಶಗಳ ಗಣ್ಯರಿಗೆ ರಾಷ್ಟ್ರಪತಿ ದೃಪದಿ ಮುರ್ಮು ಇಂದು ಸಂಜೆ ಔತಣಕೂಟ ಏರ್ಪಡಿಸಲಾಗಿದೆ. ಈ ಔತಣಕೂಟಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದ್ದು, ಇದಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಲಿದ್ದಾರೆ. ಇವರ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮನಮೋಹನ್ ಸಿಂಗ್ ಕೂಡ ಹಾಜರಾಗುತ್ತಿಲ್ಲ.
ಸಿಎಂ ಸಿದ್ದರಾಮಯ್ಯನವರೇ ಈ ಕುರಿತು ಸ್ವತಃ ಹೇಳಿರುವುದಾಗಿ ಸಿಎಂ ಆಪ್ತ ಮೂಲಗಳಿಂದ ತಿಳಿದುಬಂದಿದೆ. ಆದರೆ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಅಸಮಾಧಾನ ಇರುವುದರಿಂದ ಔತಣಕೂಟಕ್ಕೆ ಹೋಗದಿರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ರಾಷ್ಟ್ರಪತಿಯವರು ಆಯೋಜಿಸಿರುವ ಔತಣಕೂಟಕಕೆ ಎಐಸಿಸಿ ಅಧ್ಯಕ್ಷರಿಗೂ ಇದುವರೆಗೂ ಆಹ್ವಾನ ಸಿಕ್ಕಿಲ್ಲ ಎಂದು ಖರ್ಗೆ ಅವರ ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ಅನಾರೋಗ್ಯದಿಂದಾಗಿ ಈ ಔತಣಕೂಟದಲ್ಲಿ ಭಾಗಿಯಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮನಮೋಹನ್ ಸಿಂಗ್ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ. ಜಿ-20ಶೃಂಗಸಭೆ ಯಶಸ್ವಿಯಾಗಲೆಂದು ದೇವೇಗೌಡರು ಹಾರೈಸಿದರು.