ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್-ಹರಿಯಾಣದ ಶಂಭು ಗಡಿ ಬಳಿ ಬುಧವಾರ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲು ರೈತರು ಮುಂದಾಗಿದ್ದು, ಇದರಿಂದ ಟ್ರಾಫಿಕ್ ಜಾಮ್, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಶೆಲ್ ಸಿಡಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.
ಈ ನಡುವೆ ಕೃಷಿ ಸಚಿವ ಅರ್ಜುನ್ ಮುಂಡಾ ಎಲ್ಲಾ ವಿಷಯಗಳ ಬಗ್ಗೆ ಐದನೇ ಸುತ್ತಿನ ಚರ್ಚೆಗೆ ಪ್ರತಿಭಟನಾನಿರತ ರೈತರನ್ನು ಬುಧವಾರ ಆಹ್ವಾನಿಸಿದ್ದಾರೆ.
ರೈತರ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ನಾವು ಮಾತುಕತೆಯ ಮೂಲಕ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ನಾನು ಅವರನ್ನು ಚರ್ಚೆಗೆ ಆಹ್ವಾನಿಸಿದ್ದೇನೆ ಮತ್ತು ಶಾಂತಿಯನ್ನು ಕಾಪಾಡಿ ಮತ್ತು ಎಲ್ಲರಿಗೂ ಒಳ್ಳೆಯದನ್ನು ಕಂಡುಕೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
‘ದಿಲ್ಲಿ ಚಲೋ’ ಆಂದೋಲನದ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ರೈತ ಮುಖಂಡರು ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ನಂತರ ಬುಧವಾರ ಪಂಜಾಬ್ ಮತ್ತು ಹರಿಯಾಣ ಗಡಿಯಿಂದ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಪುನರಾರಂಭಿಸಿದರು. ಆದರೆ ಪೊಲೀಸರು ಅಶ್ರುವಾಯು ಸಿಡಿಸಿ ಪ್ರತಿಭಟನಾ ನಿರತರನ್ನು ಚದುರಿಸಿದರು.