ಹೊಸದಿಗಂತ ವರದಿ ಬೆಳಗಾವಿ:
ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಚುನಾವಣೆ ನೀತಿಸಂಹಿತೆ ಉಲ್ಲಂಘಿಸಿದ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿರುದ್ಧ ಕೇಂದ್ರ ಚುನಾವಣೆ ಆಯೋಗಕ್ಕೆ ದಾಖಲೆ ಸಮೇತವಾಗಿ ದೂರುನೀಡಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆಗಳನ್ನು ಹಂಚಿಕೆ ಮಾಡಿ, ವರುಣಾ ಕ್ಷೇತ್ರದ ಮತದಾರರಿಗೆ ಆಮಿಷವೊಡ್ಡಿ ಸಿದ್ದರಾಮಯ್ಯ ಆಯ್ಕೆಯಾಗಿದ್ದರು ಎಂದು ಆರೋಪಿಸಿದರು.
ಅಲ್ಲದೇ, ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಸೆ.15ರಂದು ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಮಾತನಾಡಿ, ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆ ಹಂಚಿದ್ದರಿಂದ ಗೆಲುವಿಗೆ ಸಹಕಾರಿಯಾಯಿತು ಎಂದು ಹೇಳಿದ್ದರು. ಈ ಬಗ್ಗೆಯು ದಾಖಲೆ ಸಲ್ಲಿಸಲಾಗಿದೆ ಎಂದರು.
ದಾಖಲೆ ಸಲ್ಲಿಸಿ, ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು. ಆದರೆ, ಎರಡೂವರೆ ತಿಂಗಳಾದರೂ ಕ್ರಮ ಕೈಗೊಳ್ಳದ್ದರಿಂದ ರಾಜ್ಯ ಚುನಾವಣಾಧಿಕಾರಿ ವಿರುದ್ಧವೇ ದೂರು ನೀಡಿದ್ದೇನೆ ಎಂದು ಭೀಮಪ್ಪ ಗಡಾದ ಹೇಳಿದರು.