ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಜಾತಿ ಸಮೀಕ್ಷೆಗೆ ಕೇಂದ್ರ ಸರ್ಕಾರ ಮೀಸಲಿಟ್ಟಿರುವ ಬಜೆಟ್ ಸಾಕಾಗುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ.
ಬಿಬಿಎಂಪಿ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಸಮೀಕ್ಷೆ ನಡೆಸಿತ್ತು. ಅದಕ್ಕೆ ರೂ.168 ಕೋಟಿ ವೆಚ್ಚ ಮಾಡಿತ್ತು, ಅದೂ ಹತ್ತು ವರ್ಷಗಳ ಹಿಂದೆ, ಆದರೆ, ಕೇಂದ್ರ ಸರ್ಕಾರ ಇಡೀ ದೇಶದಲ್ಲಿ ಜಾತಿಗಣತಿ ನಡೆಸಲು ರೂ.515 ಕೋಟಿ ತೆಗೆದಿರಿಸಿದೆ. ಉತ್ತರ ಪ್ರದೇಶ ಒಂದರಲ್ಲಿ ಜಾತಿಗಣತಿ ನಡೆಸಲೂ ಈ ಹಣ ಸಾಲುವುದಿಲ್ಲ ಎಂದು ವ್ಯಂಗ್ಯವಾಡಿದರು.
ಜಾತಿ ಗಣತಿ ನಡೆಸುವ ಸಂಬಂಧ ಸರ್ಕಾರಕ್ಕೆ ನಿಜವಾದ ಆಸಕ್ತಿ ಇದ್ದಿದ್ದರೆ, ಅವರು ಬಜೆಟ್ನಲ್ಲಿಯೇ ಅನುದಾನ ತೆಗೆದಿರಿಸುತ್ತಿದ್ದರು. ಹಾಗೆ ಮಾಡಿಲ್ಲ. ಈಗ ತರಾತುರಿಯಲ್ಲಿ ಜಾತಿಗಣತಿಯನ್ನು ಘೋಷಿಸಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಸಬಲೀಕರಣದ ಬಗ್ಗೆ ಮೋದಿ ಅವರಿಗೆ ನಿಜವಾದ ಕಾಳಜಿ ಇದ್ದರೆ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಿ ಎಂದು ಸವಾಲು ಹಾಕಿದರು.