ಹೊಸದಿಗಂತ ವರದಿ ಮಡಿಕೇರಿ:
ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮಿನ ಯುವಕರ ನಡುವೆ ಸಂಘರ್ಷ ನಡೆದಿರುವ ಘಟನೆ ಶನಿವಾರಸಂತೆಯಲ್ಲಿ ನಡೆದಿದ್ದು, ಶನಿವಾರಸಂತೆ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಮಂಗಳವಾರ ಸಂಜೆ ಹಿಂದೂ ಯುವತಿಯೊಂದಿಗೆ ಮುಸ್ಲಿಂ ಯುವಕರು ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ.
ಇದನ್ನು ಪ್ರಶ್ನಿಸಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಾದ ಸಚಿನ್ ಮತ್ತು ತನ್ಮಯ್ ಅವರ ಮೇಲೆ ಅಜರ್, ರಶೀದ್, ಬಾಷಾ, ಇಮ್ರಾನ್ ಎಂಬವರು ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಮಂಗಳವಾರ ರಾತ್ರಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಶನಿವಾರಸಂತೆ ಠಾಣೆಗೆ ತೆರಳಿ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಯುವಕರ ಗುಂಪು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಕ್ಷಣ ಮಡಿಕೇರಿ, ಕುಶಾಲನಗರದಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದ್ದು, ಕುಶಾಲನಗರ ಡಿವೈಎಸ್ಪಿ ಶೈಲೇಂದ್ರ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪಟ್ಟಣದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.