ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಗೆ ಪೊಲೀಸರು ನುಗ್ಗಿ, ಪಕ್ಷದ ಕಾರ್ಯಕರ್ತರ ಮೇಲೆ ಬುಧವಾರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೆಹಲಿ ಪೊಲೀಸರ ವಿರುದ್ಧ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಪಕ್ಷದ ಮುಖಂಡರಾದ ಅವಿನಾಶ್ ಪಾಂಡೆ, ಹರೀಶ್ ಚೌಧರಿ, ಪ್ರಣವ್ ಝಾ ಮತ್ತು ಚಲ್ಲಾ ವಂಶಿ ರೆಡ್ಡಿ ಅವರು ತುಘಲಕ್ ರೋಡ್ ಪೊಲೀಸ್ ಠಾಣೆಗೆ ತೆರಳಿ ಎಸಿಪಿ ಮತ್ತು ಎಸ್ಎಚ್ಒಗೆ ದೂರು ನೀಡಿದ್ದಾರೆ. ಪಕ್ಷದ ಕಚೇರಿಗೆ ನುಸುಳಿ, ಕಾನೂನಿಗೆ ವಿರುದ್ಧವಾಗಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ತನಿಖೆಯನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ರಾಹುಲ್ ಅವರ ವಿಚಾರಣೆಯನ್ನು ವಿರೋಧಿಸಿ ಗುರುವಾರ ದೇಶಾದ್ಯಂತ ಕಾಂಗ್ರೆಸ್ ಪದಾಧಿಕಾರಿಗಳು ರಾಜ್ಯಪಾಲರ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದಾರೆ.