ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ವಿರುದ್ಧದ ಕಾನೂನು ಹೋರಾಟದ ನಡುವೆ, ಪಕ್ಷವು ಅವರ ಬೆಂಬಲಕ್ಕೆ ಬಲವಾಗಿ ನಿಂತಿದೆ. ರಾಜಕೀಯ ಬೆದರಿಕೆ, ಕಿರುಕುಳದ ನಡುವೆಯೂ ಅಂತಿಮವಾಗಿ ನ್ಯಾಯವೇ ಮೇಲುಗೈ ಸಾಧಿಸಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಕ್ರಿಯೆ ನೀಡಿ, ಪವನ್ ಖೇರಾ ವಿರುದ್ಧ ಗುವಾಹಟಿ ಹೈಕೋರ್ಟ್ ನೀಡಿರುವ ತೀರ್ಪನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಕಾಂಗ್ರೆಸ್ ಪಕ್ಷವು ತನ್ನ ನಾಯಕನೊಂದಿಗೆ ದೃಢವಾಗಿ ನಿಂತಿದೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ಕುರಿತು ಪವನ್ ಖೇರಾ ಮಾಡಿದ್ದ ಆರೋಪಗಳ ಹಿನ್ನೆಲೆಯಲ್ಲಿ ಈ ವಿವಾದ ಆರಂಭವಾಗಿತ್ತು. ಹಲವು ಪಾಸ್ಪೋರ್ಟ್ಗಳು ಹಾಗೂ ವಿದೇಶದಲ್ಲಿ ಆಸ್ತಿ ಹೊಂದಿರುವ ಬಗ್ಗೆ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಎತ್ತಿದ್ದರು. ಇದಕ್ಕೆ ಪ್ರತಿಯಾಗಿ ದೂರು ದಾಖಲಾಗಿದ್ದು, ಪ್ರಕರಣ ಕಾನೂನು ಹಾದಿ ಹಿಡಿದಿದೆ.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪವನ್ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿತ್ತು. ಇದೀಗ ಈ ತೀರ್ಪು ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮೂಲಕ ಕಾಂಗ್ರೆಸ್ ಹೋರಾಟ ಮುಂದುವರಿಸಲು ಸಜ್ಜಾಗಿದೆ. ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.



