ಹೊಸದಿಗಂತ ವರದಿ ಕಲಬುರಗಿ:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ತನ್ನ ಯೋಜನೆಗಳನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ, ಎಲ್ಲ ಸಮುದಾಯಗಳ ಜನರಿಗೆ ಸಮವಾಗಿ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಬಿಜೆಪಿ ಕೋಮುವಾದಿ ಪಕ್ಷವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಕೋಮುವಾದಿ ಪಕ್ಷ ಎಂದು ಜೆಡಿಎಸ್ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ್ ಧನ್ ಖಾತೆ, ಗ್ಯಾಸ್ ಸಿಲಿಂಡರ್ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಒಂದೇ ಸಮುದಾಯಕ್ಕೆ ನೀಡಿಲ್ಲ. ಬದಲಾಗಿ ಎಲ್ಲ ಸಮುದಾಯಗಳ ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದ ಅವರು, ಬಿಜೆಪಿ ಕೋಮುವಾದಿ ಪಕ್ಷ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಸುಳ್ಳಿನ ಸರ್ಕಾರವಾಗಿದೆ. ರಾಜ್ಯದ ಜನರಿಗೆ ಉಚಿತವಾಗಿ ಪಂಚ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಹೇಳಿ, ಇದೀಗ ಎಲ್ಲದಕ್ಕೂ ಮಾನದಂಡಗಳನ್ನು ಹಾಕಿದೆ. ರಾಜ್ಯದ ಜನರಿಗೆ ಗ್ಯಾರಂಟಿಗಳ ಭರವಸೆ ನೀಡಿ, ಅನ್ಯಾಯ ಮಾಡಿದೆ ಎಂದರು.
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರಗಾಲದ ಛಾಯೆ ಕಾಲಿಟ್ಟಿದ್ದು, ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಅದ್ಯಾಗೂ ರೈತರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಹಣ ನೀಡಿಲ್ಲ.ರೈತರ ಹೊಲಗಳ ಪಂಪ್ ಸೆಟ್ ಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ಸಿಗುತ್ತಿಲ್ಲ. ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ರೈತರಿಗೆ ಸಾಕಷ್ಟು ತೊಂದರೆ ಎದುರಾಗಿದೆ ಎಂದರು.
ಕೂಡಲೇ ರೈತರ ಬೇಡಿಕೆಯಂತೆ ಏಳು ಗಂಟೆಗಳ ವಿದ್ಯುತ್ ಪೂರೈಕೆ ಆಗಬೇಕು. ನೆಟೆ ರೋಗದಿಂದ ಹಾಳಾದ ತೊಗರಿಬೇಳೆಗೆ ಸರಿಯಾದ ಪರಿಹಾರ ಸಿಗಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಮಹಾಗಾಂವ್ಕರ್,ಮುಖಂಡ ಕೃಷ್ಣ ರೆಡ್ಡಿ,ಮಹೇಶ್ವರಿ ವಾಲಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.