ಹೊಸದಿಗಂತ ವರದಿ,ಕಲಬುರಗಿ :
ವಿಶ್ವದ ಅತ್ಯಂತ ದೊಡ್ಡ ಮತ್ತು ದೇಶಭಕ್ತರ ಸಂಘಟನೆಯಾಗಿರುವ ಆರ್ಎಸ್ಎಸ್ ನಿಷೇಧಿಸಬೇಕು ಎಂಬ ಕಾಂಗ್ರೆಸ್ ಮುಖಂಡರ ಬೇಡಿಕೆ ಮತ್ತು ವಾದ ಮೂರ್ಖತನದ ಪರಮಾವಧಿಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಕೈಗೆ ತಿರುಗೇಟು ನೀಡಿದರು.
ನಗರದಲ್ಲಿ ಗುರುವಾರ ಖಾಸಗಿ ಕಾಯ೯ಕ್ರಮದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆರ್ಎಸ್ಎಸ್ ಕಾರ್ಯಕರ್ತರೆ ಇಂದು ದೇಶದ ಪ್ರಧಾನಿಯಾಗಿದ್ದಾರೆ. ಅವರು ಪ್ರಧಾನಿಯಾದ ನಂತರ ನೂರಾರು ಜನಪರ ಕೆಲಸಗಳನ್ನು ಮಾಡಿದ್ದಾರೆ. ಅಂತಹ ಸಂಘಟನೆಯ ಕುರಿತು ವಿರೋಧ ಪಕ್ಷಗಳ ನಾಯಕರು ಮಾತನಾಡುವುದು ನಿಲ್ಲಿಸಲಿ ಎಂದು ತಾಕೀತು ಮಾಡಿದರು.
ದೇಶದ್ರೋಹಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಪಿಎಫ್ಐ ಸಂಘಟನೆಯನ್ನು ನಿಷೇಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಎಂದು ಶ್ಲಾಘಿಸಿದರು. ಕಾಂಗ್ರೆಸ್ ಮುಖಂಡರು ಈ ಕ್ರಮವನ್ನು ಸ್ವಾಗತಿಸುತ್ತಾರೆ ಎಂಬುದು ನಮ್ಮ ನಂಬಿಕೆಯಾಗಿದೆ ಎಂದರು.
ಪಿಎಫ್ಐ ಕಾಂಗ್ರೆಸ್ಸಿನ ಪಾಪದ ಪಿಂಡವಾಗಿತ್ತು, ದೇಶದಲ್ಲಿನ ಕೋಮುಸೌಹಾರ್ದತೆಗೆ ಧಕ್ಕೆ ತರುತ್ತಿತ್ತು. ಹಲವು ಕೊಲೆ ಇನ್ನಿತರ ಕೇಸ್ಗಳು ದಾಖಲಾಗಿದ್ದವು. ಅವರ ಆರ್ಭಟ ಕೆಜಿ ಹಳ್ಳಿ, ಡಿಜಿ ಹಳ್ಳಿ ಘಟನೆಯಲ್ಲಿ ಶಾಸಕರ ಮನೆಗೆ ನುಗ್ಗಿ ದಾಂಧಲೆ ಮಾಡುವ ಮಟ್ಟಕ್ಕೆ ಬಂದು ತಲುಪಿತ್ತು. ನಿಷೇಧಿಸುವ ಮೂಲಕ ದೇಶದ ಜನರಿಗೆ ಬಿಜೆಪಿ ಸರ್ಕಾರ ದಸರಾ-ದೀಪಾವಳಿ ಹಬ್ಬದ ಉಡುಗೊರೆ ನೀಡಿದೆ ಎಂದು ನುಡಿದರು.
ಇಲ್ಲದ ಕೆಲ ಆರೋಪಗಳನ್ನು ಮಾಡುವ ಮೂಲಕ ಕಾಂಗ್ರೆಸ್ನವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪಿಎಫ್ಐ ನಿಷೇಧ, ಸಂವಿಧಾನ 370 ಕಲಂ ರದ್ದು ಸೇರಿದಂತೆ ಅನೇಕ ಜನಪರ ಕೆಲಸ ಮೋದಿ ಸರ್ಕಾರ ಮಾಡಿದೆ. ಜತೆಗೆ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಒಬ್ಬರು ರಾಷ್ಟ್ರೀಯ ಅಧ್ಯಕ್ಷರು ಸಿಗುತ್ತಿಲ್ಲ. ಇದು ನೋಡಿದಾಗ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿದೆ. ಅದನ್ನು ಹುಡುಲೆಂದೆ ಸಂಸದ ರಾಹುಲ್ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಡೆಸುತ್ತಿರುವಂತಿದೆ ಎಂದು ವಿಜಯೇಂದ್ರ ಲೇವಡಿ ಮಾಡಿದರು.