Friday, June 9, 2023

Latest Posts

ಕಾಂಗ್ರೆಸ್‌ ಮೊದಲ ಪಟ್ಟಿ ಪ್ರಕಟ : ಉತ್ತರ ಕನ್ನಡ ಜಿಲ್ಲೆಯ 3 ಕ್ಷೇತ್ರಗಳ ಅಭ್ಯರ್ಥಿಗಳು ಫೈನಲ್‌

ಹೊಸದಿಗಂತ ವರದಿ ಅಂಕೋಲಾ :

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ನಿರೀಕ್ಷೆಯಂತೆ ಹಳಿಯಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಲಿ ಶಾಸಕ ಆರ್. ವಿ.ದೇಶಪಾಂಡೆ ಕಣಕ್ಕಿಳಿಯುವುದು ಖಚಿತವಾಗಿದ್ದು, ಇನ್ನು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಸತೀಶ ಸೈಲ್ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಮಂಕಾಳು ವೈದ್ಯ ಅವರನ್ನು ಅಭ್ಯರ್ಥಿಗಳೆಂದು ಕಾಂಗ್ರೆಸ್ ಘೋಷಿಸಿದೆ.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, 124 ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ.

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಹುತೇಕ ನಿರೀಕ್ಷಿಸಲಾಗಿತ್ತು. ಇದೀಗ ಯಲ್ಲಾಪುರ, ಕುಮಟಾ ಹೊನ್ನಾವರ ಮತ್ತು ಶಿರಸಿ ಸಿದ್ಧಾಪುರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಬೇಕಿದೆ.

ವಿಶೇಷವಾಗಿ ಕುಮಟಾ ಹೊನ್ನಾವರ ಕ್ಷೇತ್ರದಲ್ಲಿ ಮಾಜಿ ಶಾಸಕಿ ಶಾರದಾ ಶೆಟ್ಟಿ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಜನರು ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದ್ದರೂ ಕೊನೆಯ ಕ್ಷಣದಲ್ಲಿ ಪಕ್ಷದ ಹೈಕಮಾಂಡಿನಲ್ಲಿ ವರ್ಚಸ್ಸು ಹೊಂದಿರುವ ಮಾರ್ಗರೇಟ ಆಳ್ವ ಅವರ ಪುತ್ರ ನಿವೇದಿತ್ ಆಳ್ವ ಎಂಟ್ರಿ ನೀಡಿರುವುದು ಅವರಿಗೇ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚು ಎಂದು ಕೇಳಿ ಬರುತ್ತಿದೆ.

ಯಲ್ಲಾಪುರ ಕ್ಷೇತ್ರದಲ್ಲಿ ಸಚಿವ ಶಿವರಾಮ ಹೆಬ್ಬಾರ್ ಮತ್ತು ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ವಿರುದ್ಧ ಸೆಡ್ಡು ಹೊಡೆದು ನಿಲ್ಲಬಲ್ಲ ಅಭ್ಯರ್ಥಿಗಳಿಗೆ ಪಕ್ಷದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!