ಹೊಸದಿಗಂತ ವರದಿ ಶಿವಮೊಗ್ಗ:
ಮುಂಬರುವ ಪಂಚರಾಜ್ಯಗಳ ಚುನಾವಣೆಗಾಗಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹಣ ಸಂಗ್ರಹಿಸುವ ಎಟಿಎಂ ಆಗಿದೆ ಎಂದು ಆರೋಪಿಸಿ ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಅಣಕು ಪ್ರದರ್ಶನದೊಂದಿಗೆ ಪ್ರತಿಭಟನೆ ನಡೆಸಲಾಯಿತು.
ಐದು ರಾಜ್ಯಗಳಿಗೆ ಹಣ ಸಂಗ್ರಹ ಮಾಡಿಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಲಂಚದ ಹಣ ಸಂಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್ಗೆ ಕೋಟಿಗಟ್ಟಲೆ ಹಣ ರವಾನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ಸುರ್ಜೇವಾಲ ಕರ್ನಾಟಕಕ್ಕೆ ಬಂದು ಎಟಿಎಂನಲ್ಲಿ ಚೀಲಗಟ್ಟಲೆ ಹಣ ತುಂಬಿಸಿಕೊಳ್ಳುವ ದೃಶ್ಯದ ಅಣಕು ಪ್ರದರ್ಶನ ನಡೆಸಲಾಯಿತು.
ಏಜೆಂಟರ ಮನೆಗಳಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಗಿದೆ ವರ್ಗಾವಣೆಯಲ್ಲಿ ಹಣ ದೋಚಲಾಗುತ್ತಿದೆ. ಹಿಂದಿನ ಸರ್ಕಾರದ ಯೋಜನೆಗಳು ಸಂಪೂರ್ಣ ನೆಲಕಚ್ಚಿವೆ. ಈ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತವಿಲ್ಲ. ಡಿಕೆಶಿ ಮತ್ತು ಸಿದ್ದರಾಮಯ್ಯನವರ ನಡುವೆ ವ್ಯತ್ಯಾಸವಿದೆ ಎಂದು ಆಕ್ರೋಶ ವ್ಯಕ್ತಪಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಯುವಮೋರ್ಚಾದ ಜಿಲ್ಲಾಧ್ಯಕ್ಷ ಹರಿಕೃಷ್ಣ, ಅಂಕುಶ್ ಮೊದಲಾದವರು ಇದ್ದರು.