ಹೊಸದಿಗಂತ ವರದಿ, ಶಿವಮೊಗ್ಗ:
ಮಲೆನಾಡಿದ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಪರಿಹಾರ ಸಂಬಂಧ ಸರ್ಕಾರ ಕ್ರಮ ವಹಿಸಿದೆ. ಬೆಳಗಾವಿ ಅಧಿವೇಶನಕ್ಕೂ ಮುನ್ನ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರವಾತಿ ಮುಳುಗಡೆ ಸಂತ್ರಸ್ಥರ ಸಮಸ್ಯೆಯನ್ನು ಕಾಂಗ್ರೆಸ್ ಜೀವಂತವಾಗಿ ಉಳಿಸಿಕೊಂಡು ಬಂದಿದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸದೇ ಅನುಮತಿ ನೀಡಿದ್ದರಿಂದ ಸಮಸ್ಯೆಯಾಗಿದೆ. ಅದನ್ನು ಸರಿಪಡಿಸಲು ಕ್ರಮ ಕೈಗೊಂಡಿದ್ದೇವೆ. ಹಿಂದೆಯೇ ಇದನ್ನು ಮಾಡಿದ್ದರೆ ಪಾದಯಾತ್ರೆ ಮಾಡುವ ಅಗತ್ಯವೇ ಇರುತ್ತಿರಲಿಲ್ಲ. ಕಾಂಗ್ರೆಸ್ ಯಾವಾಗಲೂ ಸಮಸ್ಯೆ ಜೀವಂತವಾಗಿ ಇಡಲು ನೋಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಿಲುಮೆ ಸಂಸ್ಥೆ ಮತದಾರರ ಪಟ್ಟಿ ವಿಷಯದಲ್ಲಿ ಅಕ್ರಮ ಎಸಗಿದೆ ಎಂಬ ದೂರು ಕೇಳಿ ಬಂದ ಕೂಡಲೇ ಅದರ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಪ್ರತಿಪಕ್ಷಗಳ ಆರೋಪಕ್ಕೆ ತನಿಖೆಯ ಮೂಲಕವೇ ಉತ್ತರ ನೀಡುತ್ತೇವೆ. ಮುಕ್ತ ತನಿಖೆ ನಡೆಸಲು ಪೊಲೀಸರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಸತ್ಯಾಂಶ ಶೀಘ್ರ ಹೊರಬರಲಿದೆ ಎಂದರು.